Sat. Mar 7th, 2026

ಧ್ವೇಷ ಭಾಷಣ ಕಾಯ್ದೆ ಮೂಲಕ ತುರ್ತು ಪರಿಸ್ಥಿತಿ ಹೇರುವ ಸಂದರ್ಭ ಸೃಷ್ಟಿ: ವಿಜಯೇಂದ್ರ

Share this with Friends

ಶಿಕಾರಿಪುರ: ಕಾಂಗ್ರೆಸ್ ಸರಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ ಮೂಲಕತುರ್ತು ಪರಿಸ್ಥಿತಿ ಹೇರುವ ಸಂದರ್ಭವನ್ನು ಸೃಷ್ಟಿ ಮಾಡಿದ್ದು, ಇದರ ವಿರುದ್ಧ ರಾಜಭವನದ ಮೆಟ್ಟಿಲೇರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಮಸೂದೆ ಜಾರಿಯನ್ನು ಖಂಡಿಸಿ ಇಲ್ಲಿನ ತಹಸೀಲ್ದಾರ್ ಕಚೇರಿ ಮುಂದೆ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಕರಾಳ ದಿನಗಳನ್ನು ತಂದಿಟ್ಟಿದ್ದರು. ಅದನ್ನು ಜನರು ಮರೆತಿಲ್ಲ, ಕಾಂಗ್ರೆಸ್ ಸರಕಾರವು ಈ ಮಸೂದೆ ಮೂಲಕ ತುರ್ತು ಪರಿಸ್ಥಿತಿ ಹೇರುವ ಸಂದರ್ಭವನ್ನು ಸೃಷ್ಟಿ ಮಾಡಿದೆ ಎಂದು ಆರೋಪಿಸಿದರು.

ವಿಪಕ್ಷಗಳ ಧ್ವನಿಯನ್ನೂ ದಮನ ಮಾಡಲು ಹೊರಟಿದ್ದಾರೆ. ಮುಂದಿನ ವಾರ ನಾನು, ವಿಪಕ್ಷ ನಾಯಕರು, ಶಾಸಕರು, ವಿಧಾನಪರಿಷತ್ ಸದಸ್ಯರು ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ. ಸರಕಾರದ ಈ ಜನವಿರೋಧಿ ನಡೆಯನ್ನು ರಾಜ್ಯಪಾಲರ ಗಮನಕ್ಕೆ ತಂದು, ಮಧ್ಯಸ್ಥಿಕೆ ವಹಿಸಲು ಕೋರುತ್ತೇವೆ. ಕಾಂಗ್ರೆಸ್ ಸರಕಾರದ ಕಿವಿ ಹಿಂಡುವ ಕೆಲಸವನ್ನು ರಾಜ್ಯಪಾಲರು ಮಾಡಬೇಕೆಂಬ ಮನವಿ ಮಾಡಲಿದ್ದೇವೆ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ ಮೂಲಕ ಪ್ರಜಾಪ್ರಭುತ್ವ ವಿರೋಧಿ ಮತ್ತು ಡಾ. ಅಂಬೇಡ್ಕರರ ಸಂವಿಧಾನದ ವಿರೋಧಿ ನಡೆಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಸಂವಿಧಾನವಿರೋಧಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳ ವಿರುದ್ಧ ಸಿದ್ದರಾಮಯ್ಯರ ಸರಕಾರ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಅಂಥ ದೇಶವಿರೋಧಿಗಳನ್ನು ಈ ಕಾಂಗ್ರೆಸ್ ಸರಕಾರ ಸಹಿಸಿಕೊಳ್ಳುತ್ತಿದೆ. ಈ ಮಸೂದೆ ಹಿಂದೂಗಳ ವಿರೋಧಿ ಎಂದು ಟೀಕಿಸಿದರು.

ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಎನ್ನುವವರ ವಿರುದ್ಧ ಎಫ್‍ಐಆರ್ ದಾಖಲಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಹಿಂದೂ ಕಾರ್ಯಕರ್ತರ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದೆ. ಹಿಂದೂಗಳನ್ನು ಅಪಮಾನಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಹಿಂದೂಗಳು ಹಿಂಸೆಯ ಪರವಾಗಿದ್ದಾರೆ ಎಂಬ ಧಾಟಿಯಲ್ಲಿ ಮುಖ್ಯಮಂತ್ರಿಗಳು ಮಾತನಾಡುತ್ತಾರೆಂದರೆ, ಈ ರಾಜ್ಯದ ಮುಖ್ಯಮಂತ್ರಿಗಳು, ಕಾಂಗ್ರೆಸ್ ಸರಕಾರಕ್ಕೆ ಹಿಂದೂಗಳ ಬಗ್ಗೆ ಮತ್ತು ಎಷ್ಟು ಅಸಡ್ಡೆ ಇದೆ, ಎಷ್ಟು ಕೋಪ ಇದೆ ಎಂದು ಗೊತ್ತಾಗುತ್ತದೆ. ಇಂಥ ನಾಲಾಯಕ್, ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ಬಂಡವಾಳ ಬಯಲು ಮಾಡಿದರೆ, ನಾಲಾಯಕ್ ಸರಕಾರ ಎಂದು ಬರೆದರೆ ಎಫ್‍ಐಆರ್ ಮಾಡಲಿದ್ದಾರೆ. ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಲು ಹೊರಟಿದೆ ಎಂದು ತಿಳಿಸಿದರು.


Share this with Friends

Related Post