ಶಿವಮೊಗ್ಗ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಭೀತಿ ಹಾಗೂ ಅನಿರೀಕ್ಷಿತ ಹವಾಮಾನ ವೈಪರೀತ್ಯದಿಂದಾಗಿ ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ವೀಡಿಯೋ ಸಂವಾದ ನಡೆಸುವ ಮೂಲಕ ಅನಿವಾಸಿ ಕನ್ನಡಿಗರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ.
ದುಬೈ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ ಸಿಲುಕಿರುವ ಪ್ರಯಾಣಿಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಅವರ ಕ್ಷೇಮ ಸಮಾಚಾರ ವಿಚಾರಿಸಿದರು. ವಿಮಾನಗಳ ರದ್ದತಿಯಿಂದಾಗಿ ಎದುರಾಗಿರುವ ಸಮಸ್ಯೆಗಳು, ವಾಸ್ತವ್ಯ ಮತ್ತು ಆಹಾರದ ಲಭ್ಯತೆಯ ಬಗ್ಗೆ ಮಾಹಿತಿ ಪಡೆದ ಸಿಎಂ, ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ರಕ್ಷಣಾ ಕಾರ್ಯದ ಕುರಿತು ವಿವರಿಸಿದ ಅವರು, ರಾಜ್ಯ ಸರ್ಕಾರವು ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದರು. ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ನೀಡಲಾಗಿದ್ದು, ಸಂತ್ರಸ್ತರಿಗೆ ತುರ್ತು ನೆರವು ನೀಡಲು ಸಮನ್ವಯ ಸಾಧಿಸಲಾಗುತ್ತಿದೆ. ಅನಿವಾಸಿ ಕನ್ನಡಿಗರ ಸಂಘ ಸಂಸ್ಥೆಗಳೂ ಸಹ ಸ್ಥಳೀಯವಾಗಿ ಸಹಾಯ ಹಸ್ತ ಚಾಚಲು ಸನ್ನದ್ಧವಾಗಿವೆ.
ಇನ್ನು ಯುದ್ಧದ ಭೀತಿಯ ಹಿನ್ನೆಲೆಯಲ್ಲಿ ಪ್ರವಾಸಿಗರು ಆತಂಕಕ್ಕೊಳಗಾಗದಂತೆ ಮನವಿ ಮಾಡಿದ ಸಿಎಂ, ಸುರಕ್ಷಿತವಾಗಿ ನಾಡಿಗೆ ಮರಳಿ ಕರೆತರಲು ವಿಮಾನಯಾನ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು. ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ಸರ್ಕಾರವು ಈಗಾಗಲೇ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದ್ದು, ಬಾಧಿತ ಕುಟುಂಬಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

