ಬೆಂಗಳೂರು: ರಾಜ್ಯ ರಾಜಕಾರಣದ ವಿದ್ಯಮಾನಗಳ ನಡುವೆ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಯೋಜಿಸಿದ್ದ ಭರ್ಜರಿ ಔತಣಕೂಟವು ಮಂಗಳವಾರ ರಾತ್ರಿ ಕಾಂಗ್ರೆಸ್ ನಾಯಕರ ಸಮಾಗಮಕ್ಕೆ ಸಾಕ್ಷಿಯಾಯಿತು.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಗರದ ಖಾಸಗಿ ಹೋಟೆಲ್ನಲ್ಲಿ ಈ ವಿಶೇಷ ಔತಣಕೂಟ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ, ಡಿ.ಕೆ. ಶಿವಕುಮಾರ್ ಅವರಿಗೆ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಅಭಿನಂದಿಸಿದರು.
ಒಗ್ಗಟ್ಟಿನ ಮಂತ್ರ:
ಸಚಿವ ಸಂಪುಟದ ಬಹುತೇಕ ಸದಸ್ಯರು, ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಈ ಔತಣಕೂಟದಲ್ಲಿ ಭಾಗಿಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ಪಕ್ಷದ ನಾಯಕತ್ವ ಬದಲಾವಣೆ ಕುರಿತು ಕೇಳಿಬರುತ್ತಿರುವ ವದಂತಿಗಳ ನಡುವೆ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ನಗುನಗುತ್ತಾ ಕಾಣಿಸಿಕೊಂಡಿದ್ದು, ಪಕ್ಷದಲ್ಲಿ ಎಲ್ಲವೂ ಸುಗಮವಾಗಿದೆ ಎಂಬ ‘ಒಗ್ಗಟ್ಟಿನ ಸಂದೇಶ’ವನ್ನು ರವಾನಿಸಿದಂತಿದೆ.
ಮತ್ತಷ್ಟು ಸಭೆಗಳ ಸುಳಿವು:
ಇದೇ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, “ಇದು ಕೇವಲ ಒಂದು ಸೌಜನ್ಯದ ಕೂಟ. ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷಗಳ ಜವಾಬ್ದಾರಿ ಪೂರೈಸಿದ ಸಂಭ್ರಮವನ್ನು ಸಹೋದ್ಯೋಗಿಗಳ ಜೊತೆ ಹಂಚಿಕೊಂಡಿದ್ದೇನೆ. ಶೀಘ್ರದಲ್ಲೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳಿಗೂ ಪ್ರತ್ಯೇಕ ಔತಣಕೂಟ ಏರ್ಪಡಿಸಲಾಗುವುದು,” ಎಂದು ತಿಳಿಸಿದರು.
ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ನಡೆದ ಈ ಔತಣಕೂಟ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಯಾವುದೇ ಅಸಮಾಧಾನಗಳಿಗೆ ಆಸ್ಪದ ನೀಡದೆ, ಮುಂಬರುವ ಸವಾಲುಗಳನ್ನು ಎದುರಿಸಲು ಕೈ ಪಡೆ ಸಜ್ಜಾಗುತ್ತಿದೆ ಎಂಬ ಮುನ್ಸೂಚನೆ ಈ ಭೋಜನ ಕೂಟದಲ್ಲಿ ಕಂಡುಬಂತು.

