Sat. Jun 6th, 2026

ಖರ್ಗೆ ಅವರಿಗೆ ಅವಮಾನ: ಅಸ್ಸಾಂ ಸಿಎಂ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

Share this with Friends

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಇದು ಕೇವಲ ಒಬ್ಬ ನಾಯಕನಿಗೆ ಮಾಡಿದ ಅವಮಾನವಲ್ಲ, ಬದಲಾಗಿ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, “ದೇಶದ ಎತ್ತರದ ದಲಿತ ನಾಯಕರಲ್ಲಿ ಒಬ್ಬರಾದ ಖರ್ಗೆ ಅವರನ್ನು ಕೀಳು ಪದಗಳಿಂದ ನಿಂದಿಸಿರುವುದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮನುವಾದಿ ಚಿಂತನೆಯನ್ನು ಪ್ರತಿಬಿಂಬಿಸುತ್ತದೆ,” ಎಂದು ಟೀಕಿಸಿದ್ದಾರೆ.

ಸೋಲಿನ ಭೀತಿಯಿಂದ ಅಸಂಬದ್ಧ ಪ್ರಲಾಪ:

“ಮುಂಬರುವ ಚುನಾವಣೆಯಲ್ಲಿ ಎದುರಾಗಲಿರುವ ಸೋಲಿನ ಭೀತಿ ಮತ್ತು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲು ಪಾಲಾಗುವ ಆತಂಕದಿಂದ ಹಿಮಂತ ಬಿಸ್ವ ಶರ್ಮಾ ತಮ್ಮ ಸಮತೋಲನ ಕಳೆದುಕೊಂಡಿದ್ದಾರೆ. ರಾಹುಲ್ ಗಾಂಧಿಯವರು ಹೇಳಿದಂತೆ, ತನಿಖಾ ಸಂಸ್ಥೆಗಳ ಭಯದಿಂದ ಅವರು ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ,” ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಪ್ರಧಾನಿ ಮೌನಕ್ಕೆ ಪ್ರಶ್ನೆ:

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿರುವ ಸಿಎಂ, “ಒಬ್ಬ ಹಿರಿಯ ನಾಯಕನಿಗೆ ಇಷ್ಟೊಂದು ಅವಮಾನವಾಗುತ್ತಿದ್ದರೂ ಪ್ರಧಾನಿಯವರು ಮೌನವಾಗಿರುವುದು ಆ ಕೃತ್ಯಕ್ಕೆ ಅವರ ಸಹಮತವಿದೆ ಎಂಬುದನ್ನು ತೋರಿಸುತ್ತದೆ. ಹಿಮಂತ ಬಿಸ್ವ ಶರ್ಮಾ ಅವರು ಕೂಡಲೇ ದೇಶದ ಜನತೆ ಹಾಗೂ ದಲಿತ ಸಮುದಾಯದ ಕ್ಷಮೆಯಾಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.

ಅಸ್ಸಾಂ ಚುನಾವಣಾ ಪ್ರಚಾರದ ವೇಳೆ ಖರ್ಗೆ ಅವರ ಬಗ್ಗೆ ಶರ್ಮಾ ನೀಡಿದ್ದ ಹೇಳಿಕೆ ಈಗ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

 


Share this with Friends

Related Post