Tue. Jun 9th, 2026

ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಿ, ಮುಜರಾಯಿ ಇಲಾಖೆಯ 235 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ: ಡಾ.ಜಿ.ಪರಮೇಶ್ವರ್ ಕಟ್ಟುನಿಟ್ಟಿನ ಆದೇಶ!

Share this with Friends

ಬೆಂಗಳೂರು: “ರಾಜ್ಯದ ಗ್ರಾಮೀಣ ಹಾಗೂ ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪ್ರತಿಭಾವಂತ ಗ್ರಾಮೀಣ ಯುವಕರಿಗೆ ಸೂಕ್ತ ಉತ್ತೇಜನ ನೀಡಬೇಕು” ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ಜಂಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸರ್ಕಾರದ ಪ್ರಮುಖ ಯೋಜನೆಗಳನ್ನು ತಳಮಟ್ಟದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

ಕ್ರೀಡಾಪಟುಗಳ ಉದ್ಯೋಗ ಮತ್ತು ಪ್ರಶಸ್ತಿ ವಿಳಂಬಕ್ಕೆ ಬ್ರೇಕ್:

ಗ್ರಾಮೀಣ ಪ್ರತಿಭೆಗಳಿಗೆ ನೆರವು: ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಅನುಕೂಲವಾಗುವಂತೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಉತ್ತಮ ಕ್ರೀಡಾ ವೇದಿಕೆಗಳನ್ನು ಒದಗಿಸಬೇಕು. ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಡಿಸಿಎಂ ಹೇಳಿದರು.

ಬಾಕಿ ಪ್ರಶಸ್ತಿಗಳ ಶೀಘ್ರ ವಿತರಣೆ: ಸಾಧಕ ಕ್ರೀಡಾಪಟುಗಳಿಗೆ ನೀಡಲಾಗುವ ವಿವಿಧ ರಾಜ್ಯ ಮಟ್ಟದ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಳ್ಳಬಾರದು. ಅರ್ಹರನ್ನು ಅತ್ಯಂತ ಪಾರದರ್ಶಕವಾಗಿ ಗುರುತಿಸಿ ಗೌರವಿಸಬೇಕು ಎಂದು ತಾಕೀತು ಮಾಡಿದರು.

ಸರ್ಕಾರಿ ಹುದ್ದೆಗಳಿಗೆ ನೇಮಕಾತಿ: ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಸೇರಿದಂತೆ ದೊಡ್ಡ ಕ್ರೀಡಾಕೂಟಗಳಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಸಾಧಕರಿಗೆ ಕ್ರೀಡಾ ಕೋಟಾದಡಿ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಮುಜರಾಯಿ ಇಲಾಖೆಯಲ್ಲಿ 235 ಹುದ್ದೆಗಳ ಭರ್ತಿಗೆ ಚಾಲನೆ:

ರಾಜ್ಯದ ಮುಜರಾಯಿ ಇಲಾಖೆಯ ಆಡಳಿತಾತ್ಮಕ ಸ್ಥಿತಿಗತಿಗಳನ್ನು ಪರಿಶೀಲಿಸಿದ ಡಾ. ಜಿ. ಪರಮೇಶ್ವರ್, ಇಲಾಖೆಯ ವ್ಯಾಪ್ತಿಗೆ ಒಳಪಡುವ ವಿವಿಧ ದೇವಸ್ಥಾನಗಳ ವ್ಯವಸ್ಥಿತ ನಿರ್ವಹಣೆ ಮತ್ತು ಭಕ್ತಾದಿಗಳಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಬೇಕು ಎಂದರು. ಇದೇ ವೇಳೆ ಇಲಾಖೆಯಲ್ಲಿ ದೀರ್ಘಕಾಲದಿಂದ ಖಾಲಿ ಇರುವ 235 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದರು.

 

 


Share this with Friends

Related Post