ಬೆಂಗಳೂರು: ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಪುನರಾರಂಭಿಸಲು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸಮ್ಮತಿ ಸೂಚಿಸಿದೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರವಾಸೋದ್ಯಮ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದರು.
ಸುರಕ್ಷಿತ ಸಫಾರಿಗೆ ಒತ್ತು:
ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ವಲಯಗಳಲ್ಲಿ ಹುಲಿ ಹಾಗೂ ಚಿರತೆಗಳ ಸಾಂದ್ರತೆ ಹೆಚ್ಚಾಗಿದೆ. ಮಾನವ-ವನ್ಯಜೀವಿ ಸಂಘರ್ಷ ನಡೆಯುವ ಜಾಗಗಳಿಗಿಂತ ಈ ಸಫಾರಿ ಪ್ರದೇಶಗಳಲ್ಲೇ ವನ್ಯಜೀವಿಗಳ ಸಂಖ್ಯೆ ಹೆಚ್ಚಿರುವುದರಿಂದ, ಪ್ರವಾಸಿಗರ ಭದ್ರತೆಗೆ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿ ಸಫಾರಿ ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮೇಕೆದಾಟು ಯೋಜನೆಗೆ ತಮಿಳುನಾಡು ತಕರಾರು; ಸಿಎಂ ಅಲರ್ಟ್:
ಮೇಕೆದಾಟು ಕುಡಿಯುವ ನೀರು ಯೋಜನೆಗೆ ಸಣ್ಣಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ನಲ್ಲಿ ತಕರಾರು ತೆಗೆಯಲು ತಮಿಳುನಾಡು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಯೋಜನೆಯ ಹಾದಿಯಲ್ಲಿ ಎದುರಾಗಬಹುದಾದ ಎಲ್ಲಾ ತಾಂತ್ರಿಕ ಹಾಗೂ ಕಾನೂನು ಸಮಸ್ಯೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ತಕ್ಷಣವೇ ಪರಿಣಾಮಕಾರಿಯಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದರು.
ಅಪಾಯಕಾರಿ ಮರಗಳ ತೆರವಿಗೆ ಆದೇಶ:
ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿಯಾಗಿ ಒಣಗಿರುವ ಮರಗಳು ಮತ್ತು ಕೊಂಬೆಗಳನ್ನು ಪತ್ತೆ ಹಚ್ಚಿ, ಅವುಗಳನ್ನು ತಕ್ಷಣವೇ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ಈ ಉನ್ನತ ಮಟ್ಟದ ಸಭೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ರಾಯಭಾರಿ ಹಾಗೂ ಮಾಜಿ ಕ್ರಿಕೆಟಿಗ ಅನೀಲ್ ಕುಂಬ್ಳೆ ಸೇರಿದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

