ಮಂಡ್ಯ: ಜಿಲ್ಲೆಯ ಮಂಡ್ಯ ತಾಲ್ಲೂಕಿನ ಬಿ. ಹಟ್ನ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ನಿವಾಸಕ್ಕೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಇಂದು ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ರೈತನ ಆತ್ಮಹತ್ಯೆಗೆ ಕಾರಣ ಹಾಗೂ ಅವರ ಕುಟುಂಬದ ಸದ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಸಚಿವರು, ಸಂಕಷ್ಟದ ಸಮಯದಲ್ಲಿ ಸರ್ಕಾರ ನಿಮ್ಮೊಂದಿಗೆ ಇರಲಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ಸರ್ಕಾರದ ನಿಯಮಾವಳಿಗಳ ಅನ್ವಯ ಮೃತ ರೈತನ ಪುತ್ರ ಸ್ವಾಮಿ ಅವರಿಗೆ ₹5 ಲಕ್ಷ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಸಚಿವರು, ರೈತರು ಯಾವುದೇ ಕಾರಣಕ್ಕೂ ಸಾಲಬಾಧೆ ಅಥವಾ ಇತರೆ ಸಂಕಷ್ಟಗಳಿಗೆ ಧೃತಿಗೆಟ್ಟು ಆತ್ಮಹತ್ಯೆಯಂತಹ ತೀವ್ರ ನಿರ್ಧಾರಗಳನ್ನು ಕೈಗೊಳ್ಳಬಾರದು. ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಕೃಷಿ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ನೆರವು ಪಡೆಯಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

