ಬೆಳಗಾವಿ ಸುವರ್ಣ ವಿಧಾನಸೌಧ: ಸಂಚಾರದ ವೇಳೆ ಎಲೆಕ್ಟ್ರಿಕ್ ಬಸ್ಗಳಲ್ಲಿ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು,ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಅನುಗುಣವಾಗಿ ಕರಾರು ಒಪ್ಪಂದದಲ್ಲಿದ್ದಂತೆ ದಂಡವನ್ನು ವಿಧಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಡಿ.10ರಂದು ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 446ರ ಮೇಲೆ ಮಾತನಾಡಿದ ಅವರು,ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್ ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ.ಬಸ್ಸುಗಳ ಕಾರ್ಯಕ್ಷಮತೆಯ ಬಗ್ಗೆ ಈಗಾಗಲೇ ಭಾರತ ಸರ್ಕಾರದ ಭಾರೀ ಕೈಗಾರಿಕೆಗಳ ಸಚಿವರಿಗೆ ಪತ್ರದ ಮೂಲಕ ಮಾಹಿತಿ ಸಲ್ಲಿಸಲಾಗಿದೆ. ಅದರಂತೆ, ದಿನಾಂಕ 06.11.2025 ರಂದು ಭಾರೀ ಕೈಗಾರಿಕೆಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳಾದ ಡಾ.ಹನೀಫ್ ಖುರೇಷಿ ಅವರ ಅಧ್ಯಕ್ಷತೆಯಲ್ಲ ಎಲೆಕ್ಟ್ರಿಕ್ ಬಸ್ಸುಗಳ ಎಲ್ಲಾ ಆಚರಣಾದಾರರೊಂದಿಗೆ ಸಭೆಯನ್ನು ನಡೆಸಲಾಗಿರುತ್ತದೆ ಹಾಗೂ 45 ದಿನಗಳೊಳಗೆ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಇದುವರೆಗೆ ಯಾವುದೇ ಎಲೆಕ್ಟ್ರಿಲ್ ಕಾರ್ಯಾಚರಣೆಯಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಬೆಂಗಳೂರು (ನಗರ), ಮಡಿಕೇರಿ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 47 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆಯಲ್ಲಿವೆ ಎಂದರು.
ಜನವರಿ-2023 ರಿಂದ ಇಲ್ಲಿಯವರೆಗೆ ಕಾರ್ಯಾಚರಣೆ ಸಮಯದಲ್ಲಿ ಆಕಸ್ಮಿಕವಾಗಿ ವಿವಿಧ ಕಾರಣಗಳಿಂದ ಒಟ್ಟು 477 ಬಾರಿ ಬಸ್ಸುಗಳು ಅವಘಡ ಸಂಭವಿಸಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಪರ್ಯಾಯ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಬೆಂಗಳೂರ ಮಹಾನಗರ ಸಾರಿಗೆ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ 1221 ಹವಾನಿಯಂತ್ರಣ ರಹಿತ ಎಲೆಕ್ಟ್ರಿಕ್ ಬಸ್ಸುಗಳು ಕಾರ್ಯಾಚರಣೆಯಲ್ಲಿರುತ್ತವೆ. 2023-24 ರಿಂದ ಸೆಪ್ಟೆಂಬರ್-2025 ರವರೆಗೆ ಬ್ಯಾಟರಿ ದೋಷಗಳಿಂದ 14,082 ಬಾರಿ ಹಾಗೂ ಇನ್ನೀತರ ದೋಷದಿಂದ 2049 ಬಾರಿ ಅಪಘಾತಕ್ಕೀಡಾಗಿರುತ್ತವೆ. ಸಾರ್ವಜನಿಕ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕಂಪನಿಯವರು ಈ ಬಸ್ಸುಗಳನ್ನು ದುರಸ್ತಿಗೊಳಿಸಿ ಆಚರಣೆಗೆ ಒದಗಿಸಿರುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.

