ಬೆಳಗಾವಿ:ದೇಶದ ಏರೋಸ್ಪೇಸ್ ಹಾಗೂ ಡಿಫೆನ್ಸ್ ಕ್ಷೇತ್ರಕ್ಕೆ ನಮ್ಮ ರಾಜ್ಯ ಶೇ. 65 ರಷ್ಟು ಕೊಡುಗೆ ನೀಡುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದ ಏರೋಸ್ಪೇಸ್ ಹಾಗೂ ಡಿಫೆನ್ಸ್ ಕ್ಷೇತ್ರಕ್ಕೆ ನಮ್ಮ ರಾಜ್ಯ ಶೇ. 65 ರಷ್ಟು ಕೊಡುಗೆ ನೀಡುತ್ತಿದೆ. ನಮ್ಮ ರಾಜ್ಯವನ್ನು ಎಕೋ ಸ್ಪೇಸ್ ನಲ್ಲಿಯೂ ಮುಂಚೂಣಿ ರಾಜ್ಯವನ್ನಾಗಿ ಪರಿಗಣಿಸಲಾಗಿದೆ. ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡ ಪ್ರದೇಶದಲ್ಲಿ ಬಹುಮುಖ್ಯವಾದ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ನಾವು ನಿಯೋಗದೊಂದಿಗೆ ತೆರಳಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಲಾಗಿದ್ದು, ಅವರೂ ಕೂಡ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ವ ಪಕ್ಷ ಶಾಸಕರುಗಳು ಬೆಂಬಲವಾಗಿ ನಿಂತು, ಈ ಯೋಜನೆ ಸಾಕಾರಗೊಳಿಸಬೇಕಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏರೋಸ್ಪೇಸ್ ಪಾರ್ಕ್ ನಿರ್ಮಾಣ ಸಂಬಂಧಿಸಿದಂತೆ, 13 ಗ್ರಾಮಗಳಿಂದ 1,777 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆಯಿಂದ ಕೈಬಿಡಲು, ಕಳೆದ ಡಿ. 06 ರಂದು ಅಧಿಸೂಚನೆ ಹೊರಡಿಸಿದ್ದು, ಈ ಸಂಪೂರ್ಣ ಪ್ರದೇಶವನ್ನು ಹಸಿರು ವಲಯವನ್ನಾಗಿ ಮುಂದುವರೆಸುವ ಸಲುವಾಗಿ ವಿಶೇಷ ಕೃಷಿ ವಲಯ ಎಂದು ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೆ ಮೆ: ಏಕಸ್ ಎಸ್.ಇ.ಝೆಡ್ ಪ್ರೈ.ಲಿ. ಅವರು ಏರೋಸ್ಪೇಸ್ ಕಾಂಪೋನೆಂಟ್ಗಳ ಎಸ್.ಇ.ಝೆಡ್ ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಕಾಂಪೋನೆಂಟ್ಗಳ ತಯಾರಿಕೆಯಲ್ಲಿ ಎಕೋ ಸಿಸ್ಟಂ ಅಭಿವೃದ್ಧಿಯಾಗಿದ್ದು, ಜಿಲ್ಲೆಯಲ್ಲಿ ಈ ವಲಯದಲ್ಲಿ ಬಂಡವಾಳ ಆಕರ್ಷಿಸಲು ವಿಪುಲ ಅವಕಾಶಗಳಿವೆ. ಬೆಂಗಳೂರು-ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಅಂದಾಜು 3 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುತ್ತಿದ್ದು, ಈ ಪ್ರದೇಶದಲ್ಲಿ ಏರೋಸ್ಪೇಸ್ ಕಾಂಪೋನೆಂಟ್ಗಳ ತಯಾರಿಕಾ ಘಟಕಗಳಿಗೆ ಅಗತ್ಯ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ. ಇದರ ಜೊತೆಗೆ ಇದೇ ರೀತಿ ಉತ್ತರ ಕರ್ನಾಟಕದಲ್ಲಿ ಏರೋಸ್ಪೇಸ್ ಕಾಂಪೋನೆಂಟ್ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಬೆಂಬಲ ಹಾಗೂ ಆಕರ್ಷಕ ರಿಯಾಯಿತಿ ಮತ್ತು ಪ್ರೋತ್ಸಾಹ ಒದಗಿಸಲು ನಾವು ಸಿದ್ಧರಿದ್ದೇವೆ. ಹೊಸ ಕೈಗಾರಿಕಾ ನೀತಿಯಡಿ ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲ್ಲೂಕುಗಳು ಎಂದು ಘೋಷಿಸಲಾಗಿರುವ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪಿಸ ಬಯಸುವವರಿಗೆ ಪ್ರೋತ್ಸಾಹ ಜೊತೆಗೆ ಹೆಚ್ಚುವರಿಯಾಗಿ ಶೇ. 3 ರಿಂದ 5 ರಷ್ಟು ವಿಶೇಷ ನೆರವು ನೀಡಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ಕೋಲಾರ ಜಿಲ್ಲೆಯ ಯದರೂರು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಭೂಸ್ವಾಧೀನ:
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಯದರೂರು ಗ್ರಾಮದಲ್ಲಿ 1273ಎಕರೆ ಜಮೀನಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲು ಭೂ-ಸ್ವಾಧೀನಗೊಳಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದ ಶಾಸಕ ವೆಂಕಟಶಿವರೆಡ್ಡಿ ಜಿ.ಕೆ. ಇವರ ಪ್ರಶ್ನೆಗೆ ಯದರೂರು ಗ್ರಾಮದಲ್ಲಿ 1273 ಎಕರೆ ಜಮೀನಿನಲ್ಲಿ ಕೈಗಾರಿಕಾ ಸ್ಥಾಪನೆ ಮಾಡಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ.ಭೂ-ಸ್ವಾಧೀನಗೊಳಿಸಲು ಸರ್ವೆ ತಪಾಸಕರು ಮತ್ತು ಭೂಮಾಪಕರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಭೂ ಮಾಲೀಕರು ಜೆ.ಎಂ.ಸಿ ಕಾರ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಶಾಸಕ ವೆಂಕಟಶಿವಾರೆಡ್ಡಿ ಅವರು ಗ್ರಾಮಸ್ಥರು ಮತ್ತು ಭೂ ಮಾಲೀಕರು ಅಡ್ಡಿಪಡಿಸದಂತೆ ಕ್ರಮ ವಹಿಸಲಾಗುವುದು ಎಂದು ಸದನದಲ್ಲಿ ತಿಳಿಸಿದರು. ಸದನ ಮುಗಿದ ನಂತರ ಮತ್ತೊಮ್ಮೆ ಜೆ.ಎಂ.ಸಿ ಸರ್ವೆ ಕಾರ್ಯಕ್ಕೆ ಸರ್ವೆ ತಪಾಸಕರನ್ನು ಕಳುಹಿಸಲಾಗುವುದು ಎಂದು ಸಚಿವರು ಉತ್ತರಿಸಿದರು.

