ಬೆಂಗಳೂರು:ಯುವಕರು ತಮ್ಮ ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿ, ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ನ್ಯಾಯಸಮ್ಮತ ಮಾರ್ಗದಲ್ಲಿ ಸಾಧನೆ ಮಾಡಬೇಕು ಎಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವಥನಾರಾಯಣ ಕರೆ ನೀಡಿದರು.
ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ರಾಷ್ಟ್ರೀಯ ಯುವ ದಿನ – 2026 ಕಾರ್ಯಕ್ರಮವನ್ನು ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ನಡೆಸಲಾಯಿತು. ಸ್ವಾಮಿ ವಿವೇಕಾನಂದರ ಆದರ್ಶಗಳು ಯುವಜನತೆಗೆ ಶಾಶ್ವತ ಪ್ರೇರಣೆಯಾಗಿದ್ದು, ಇಂದಿನ ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಸೃಜನಶೀಲತೆ, ವೃತ್ತಿಜೀವನ, ನಾಯಕತ್ವ ಮತ್ತು ವ್ಯಕ್ತಿತ್ವ ನಿರ್ಮಾಣದ ಕುರಿತ ಚರ್ಚೆ ಈ ಕಾರ್ಯಕ್ರಮದ ಕೇಂದ್ರಬಿಂದುವಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಸಿ.ಎನ್. ಅಶ್ವಥನಾರಾಯಣ ಅವರು, ರಾಷ್ಟ್ರೀಯ ಯುವ ದಿನವು ಕೇವಲ ಆಚರಣೆಯ ದಿನವಲ್ಲದೆ ಯುವಶಕ್ತಿಯನ್ನು ಜಾಗೃತಗೊಳಿಸುವ ಮಹತ್ವದ ಸಂದರ್ಭವೆಂದು ಹೇಳಿದರು. ಯುವಕರು ತಮ್ಮ ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿ, ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ನ್ಯಾಯಸಮ್ಮತ ಮಾರ್ಗದಲ್ಲಿ ಸಾಧನೆ ಮಾಡಬೇಕು ಎಂದು ಅವರು ತಿಳಿಸಿದರು. ಅಕಾಡೆಮಿಕ್ ಸಾಧನೆಯ ಜೊತೆಗೆ ಆತ್ಮಾವಲೋಕನ, ವ್ಯಕ್ತಿತ್ವ ಅಭಿವೃದ್ಧಿ ಮತ್ತು ಸಮಾಜದ ಹೊಣೆಗಾರಿಕೆಯನ್ನು ಅರಿತುಕೊಳ್ಳುವುದು ಅಗತ್ಯವೆಂದು ಅವರು ಹೇಳಿದರು.
AI ಮತ್ತು ತಂತ್ರಜ್ಞಾನ ಮಾನವನನ್ನು ಅಲಸ್ಯಗೊಳಿಸಲು ಅಲ್ಲ, ಸಹಕಾರ ಮತ್ತು ಸಾಮರ್ಥ್ಯ ವೃದ್ಧಿಗೆ ಬಳಸಬೇಕು ಎಂಬ ಸಂದೇಶವನ್ನು ಅವರು ನೀಡಿದರು. ಭಾರತ ತನ್ನದೇ ಆದ ಕೃತಕ ಬುದ್ಧಿಮತ್ತೆ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಯುವ ಸಾಧಕರಿಗೆ ‘ಯೂತ್ ಎಡ್ಜ್ – 2026’ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಖ್ಯಾತ ಗಾಯಕ ನವೀನ್ ಸಜ್ಜು ಅವರಿಗೆ ಕಲಾ ಕ್ಷೇತ್ರದಲ್ಲಿ, ಒಲಿಂಪಿಕ್ ಕ್ರೀಡಾಪಟು ಕುಮಾರಿ ಉನ್ನತಿ ಅಯ್ಯಪ್ಪ ಅವರಿಗೆ ಕ್ರೀಡಾ ಕ್ಷೇತ್ರದಲ್ಲಿ ಮತ್ತು ಎಥೀರಿಯಲ್ ಮೆಷೀನ್ಸ್ ಸಂಸ್ಥೆಯ ಸಹ-ಸಂಸ್ಥಾಪಕ ಕೌಶಿಕ್ ಮುದ್ದಾ ಅವರಿಗೆ ತಂತ್ರಜ್ಞಾನ ಮತ್ತು ಉದ್ಯಮ ಕ್ಷೇತ್ರದಲ್ಲಿ ನೀಡಿದ ಸಾಧನೆಗಾಗಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಯುವಜನತೆ, ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಯುವಶಕ್ತಿ ಸಕ್ರಿಯ ಪಾತ್ರವಹಿಸಬೇಕೆಂಬ ಸಂದೇಶದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.

