Mon. Mar 9th, 2026

ಅಸ್ಸಾಂ ಕಾಂಗ್ರೆಸ್ ಗೆಲುವಿಗೆ ‘ಕೈ’ ಮಾಸ್ಟರ್ ಪ್ಲಾನ್: ಗೌರವ್ ಗೊಗೋಯ್ ಜೊತೆ ಡಿ.ಕೆ. ಶಿವಕುಮಾರ್ ಚರ್ಚೆ

Share this with Friends

ನವದೆಹಲಿ: ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನೇಮಿಸಿರುವ ಹಿರಿಯ ವೀಕ್ಷಕ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದರು. ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೌರವ್ ಗೊಗೋಯ್ ಅವರೊಂದಿಗೆ ಮುಖಾಮುಖಿಯಾದ ಅವರು, ಚುನಾವಣಾ ರಣತಂತ್ರಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು.

ಅಸ್ಸಾಂನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಬಗ್ಗೆ ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ರೂಪಿಸುವ ಕುರಿತು ಉಭಯ ನಾಯಕರು ಚರ್ಚಿಸಿದರು. ಈಗಾಗಲೇ ಮೊದಲ ಪಟ್ಟಿಯಲ್ಲಿ 42 ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಮತ್ತು ಪ್ರಚಾರದ ರೂಪುರೇಷೆಗಳ ಬಗ್ಗೆ ಈ ಸಭೆಯಲ್ಲಿ ನಿರ್ಧರಿಸಿದೆ ಎನ್ನಲಾಗಿದೆ.

ಜೋರಹತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗೌರವ್ ಗೊಗೋಯ್ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ನಿರ್ವಹಣೆಯ ಬಗ್ಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

 ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಸ್ಸಾಂನಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಾವು ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಅಸ್ಸಾಂನಲ್ಲಿ ಶೀಘ್ರದಲ್ಲೇ ದೊಡ್ಡ ರಾಜಕೀಯ ಬದಲಾವಣೆ ಕಂಡುಬರಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಗೌರವ್ ಗೊಗೋಯ್ ಅವರ ನೇತೃತ್ವದಲ್ಲಿ ಅಸ್ಸಾಂ ಕಾಂಗ್ರೆಸ್ ಸಂಘಟಿತವಾಗಿ ಹೋರಾಟ ನಡೆಸುತ್ತಿದೆ. ಕರ್ನಾಟಕದ ಮಾದರಿಯಲ್ಲೇ ಅಸ್ಸಾಂನಲ್ಲೂ ಪಕ್ಷದ ಗೆಲುವಿಗೆ ಬೇಕಾದ ಎಲ್ಲಾ ತಾಂತ್ರಿಕ ಮತ್ತು ಸಾಂಘಿಕ ಬೆಂಬಲವನ್ನು ನೀಡಲಾಗುವುದು. ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ಪ್ರಚಾರದ ಭರಾಟೆ ಹೆಚ್ಚಾಗಲಿದೆ,” ಎಂದು ಡಿಕೆಶಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಅಸ್ಸಾಂ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ನಡೆಸುತ್ತಿರುವ ಮೊದಲ ಪ್ರಮುಖ ಸಭೆ ಇದಾಗಿದ್ದು, ರಾಷ್ಟ್ರ ರಾಜಕಾರಣದ ಗಮನ ಸೆಳೆದಿದೆ.

 


Share this with Friends

Related Post