Thu. Mar 5th, 2026

ಇವಿ ಅಭಿವೃದ್ಧಿಗೆ ಕೇಂದ್ರದ ಬೂಸ್ಟ್: ಮಂಡ್ಯದಲ್ಲಿ ಜಾಗತಿಕ ಮಟ್ಟದ ವಾಹನ ಪರೀಕ್ಷಾ ಕೇಂದ್ರ

Share this with Friends

ಬೆಂಗಳೂರು:ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ (ಇವಿ) ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನಗರದ ಹೆಚ್‌ಎಂಟಿ ಭವನದಲ್ಲಿ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ (FKCCI) ಪದಾಧಿಕಾರಿಗಳು ಹಾಗೂ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು, ರಾಜ್ಯದಲ್ಲಿ ಇವಿ ಪರಿಸರ ವ್ಯವಸ್ಥೆ ನಿರ್ಮಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಮಂಡ್ಯದಲ್ಲಿ ಜಾಗತಿಕ ಮಟ್ಟದ ಕೇಂದ್ರ:

ಈ ಸಭೆಯ ಪ್ರಮುಖ ನಿರ್ಧಾರವಾಗಿ, ಮಂಡ್ಯ ಜಿಲ್ಲೆಯಲ್ಲಿ ಸುಮಾರು ₹500 ಕೋಟಿ ವೆಚ್ಚದಲ್ಲಿ ಜಾಗತಿಕ ಗುಣಮಟ್ಟದ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಲಾಗಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ತರಬೇತಿ ಮತ್ತು ಸಂಶೋಧನಾ ಕೇಂದ್ರಕ್ಕೆ ಈಗಾಗಲೇ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದ್ದು, ಯೋಜನೆಯ ವ್ಯಾಪ್ತಿ ಹೆಚ್ಚಾದಲ್ಲಿ ಹೆಚ್ಚುವರಿಯಾಗಿ ಇನ್ನೂ ₹500 ಕೋಟಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಚಿವರು ತಿಳಿಸಿದರು.

ರಾಜ್ಯ ಸರ್ಕಾರದ ಸಹಕಾರಕ್ಕೆ ಮನವಿ:

ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಕುಮಾರಸ್ವಾಮಿ ಅವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಇವಿ ಉತ್ಪಾದನಾ ಘಟಕಗಳಿಗೆ ಪೂರಕವಾದ ಈ ಕೇಂದ್ರಕ್ಕೆ ಅಗತ್ಯ ಭೂಮಿ ಹಾಗೂ ಮೂಲಸೌಕರ್ಯ ಒದಗಿಸುವಂತೆ ಕೋರಲಾಗಿದ್ದು, ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಕೈಗಾರಿಕೆಗಳ ವಲಸೆ ತಡೆಗೆ ಕ್ರಮ:

ಕರ್ನಾಟಕದಲ್ಲಿ ಸ್ಥಾಪನೆಯಾಗುವ ಹಲವು ಸ್ಟಾರ್ಟ್-ಅಪ್ ಹಾಗೂ ಇವಿ ಕಂಪನಿಗಳು ಉತ್ಪಾದನೆಗಾಗಿ ನೆರೆ ರಾಜ್ಯಗಳನ್ನು ಅವಲಂಬಿಸುತ್ತಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ವಲಸೆಯನ್ನು ತಡೆದು, ರಾಜ್ಯದಲ್ಲೇ ಸಂಶೋಧನೆ ಮತ್ತು ಉತ್ಪಾದನೆಗೆ ವೇದಿಕೆ ಕಲ್ಪಿಸುವುದು ಈ ARAI ಕೇಂದ್ರದ ಮುಖ್ಯ ಉದ್ದೇಶವಾಗಿದೆ. ಇದು ಸ್ಥಳೀಯವಾಗಿ ಸಾವಿರಾರು ಉದ್ಯೋಗ ಸೃಷ್ಟಿಗೂ ದಾರಿಯಾಗಲಿದೆ ಎಂದು ಅವರು ಒತ್ತಿ ಹೇಳಿದರು.

ಪ್ರಧಾನಿ ಕನಸಿಗೆ ಪೂರಕ:

ಸಾರಿಗೆ ಕ್ಷೇತ್ರದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯಕ್ಕೆ ಈ ಯೋಜನೆ ದೊಡ್ಡ ಶಕ್ತಿ ನೀಡಲಿದೆ. ಇವಿ ಉದ್ಯಮಕ್ಕೆ ಅಗತ್ಯವಿರುವ ಪರೀಕ್ಷಾ ಸೌಲಭ್ಯಗಳು ರಾಜ್ಯದಲ್ಲೇ ಲಭ್ಯವಾಗುವುದರಿಂದ ವಾಹನೋದ್ಯಮಕ್ಕೆ ಹೊಸ ವೇಗ ಸಿಗಲಿದೆ ಎಂದು ಕೈಗಾರಿಕೋದ್ಯಮಿಗಳು ಸಚಿವರ ನಿರ್ಧಾರವನ್ನು ಶ್ಲಾಘಿಸಿದರು.

ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಪ್ರಗತಿಗೆ ಹೊಸ ವೇಗ:

“ಸ್ಥಳೀಯ ಮಟ್ಟದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಾಗಿದೆ. ಆ ನಿಟ್ಟಿನಲ್ಲಿ ‘ಆತ್ಮನಿರ್ಭರ ಭಾರತ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಅಡಿಯಲ್ಲಿ ಈ ಕ್ಷೇತ್ರಕ್ಕೆ ಉತ್ತೇಜನ ನೀಡಲಾಗುತ್ತಿದೆ,” ಎಂದು ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು. ಮಂಡ್ಯದಲ್ಲಿ ಈ ಕೇಂದ್ರ ಸ್ಥಾಪನೆಯಾದರೆ ಸಾವಿರಾರು ಜನರಿಗೆ ನೇರ ಉದ್ಯೋಗ ದೊರೆಯುವುದಲ್ಲದೆ, ಪರೋಕ್ಷವಾಗಿ ದೊಡ್ಡ ಮಟ್ಟದ ‘ಆಟೋ ಇಕೋ ಸಿಸ್ಟಮ್’ ನಿರ್ಮಾಣವಾಗಲಿದೆ. ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಇದರಿಂದ ರಾಜ್ಯದ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ ಎಂದು ಅವರು ಪ್ರತಿಪಾದಿಸಿದರು.

ಈ ಮಹತ್ವದ ಸಭೆಯಲ್ಲಿ ಎಫ್‌ಕೆಸಿಸಿಐ (FKCCI) ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಬಿ.ಪಿ. ಶಶಿಧರ್ ಹಾಗೂ ಗ್ರೀನ್ ಎನರ್ಜಿ ಸಮಿತಿ ಅಧ್ಯಕ್ಷ ರಮೇಶ್ ಶಿವಣ್ಣ ಉಪಸ್ಥಿತರಿದ್ದರು. ಅಲ್ಲದೆ, ಮಂಡಳಿಯ ಮಾಜಿ ಅಧ್ಯಕ್ಷರಾದ ಎಸ್. ಸಂಪತ್ ರಾಮನ್, ಆರ್. ಶಿವಕುಮಾರ್, ಕೆ. ಶಿವಷಣ್ಮುಗಂ, ಎಲ್. ಲಕ್ಷ್ಮಣ ಸೇರಿದಂತೆ ಹಿರಿಯ ಕೈಗಾರಿಕೋದ್ಯಮಿಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು.


Share this with Friends

Related Post