Fri. Mar 6th, 2026

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಸಿಎಂ ಸ್ಪಂದನೆ: 5 ವರ್ಷ ವಯೋಮಿತಿ ಸಡಿಲಿಕೆ, ಬೃಹತ್ ನೇಮಕಾತಿ ಭರವಸೆ

Share this with Friends

ಧಾರವಾಡ:ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಹಮ್ಮಿಕೊಂಡಿರುವ ಪ್ರತಿಭಟನೆಯ ಧ್ವನಿ ರಾಜ್ಯ ಸರ್ಕಾರದ ಶಕ್ತಿ ಸೌಧಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋರಾಟಗಾರರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಯುವಜನತೆಯ ಹಿತರಕ್ಷಣೆ ತಮ್ಮ ಸರ್ಕಾರದ ಆದ್ಯತೆ ಎಂದು ಘೋಷಿಸಿದ್ದಾರೆ.

“ಉದ್ಯೋಗಾಕಾಂಕ್ಷಿಗಳ ಆತಂಕ ಮತ್ತು ಅನಿಶ್ಚಿತತೆಯನ್ನು ನಾನು ಹತ್ತಿರದಿಂದ ಗಮನಿಸಿದ್ದೇನೆ. ಧಾರವಾಡದ ಪ್ರತಿಭಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ,” ಎಂದು ಸಿಎಂ ತಿಳಿಸಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ಸುಮಾರು 2.64 ಲಕ್ಷ ಹುದ್ದೆಗಳನ್ನು ಪಾರದರ್ಶಕವಾಗಿ ಭರ್ತಿ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ ನೇಮಕಾತಿ ಪ್ರಾಧಿಕಾರಗಳಿಗೆ ಚುರುಕು ಮುಟ್ಟಿಸುವ ಕೆಲಸ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಐದು ವರ್ಷ ವಯೋಮಿತಿ ಸಡಿಲಿಕೆ:

ನೇಮಕಾತಿ ಪ್ರಕ್ರಿಯೆಗಳಲ್ಲಿನ ವಿಳಂಬದಿಂದಾಗಿ ಪರೀಕ್ಷೆ ಬರೆಯುವ ಅವಕಾಶ ವಂಚಿತರಾಗುತ್ತಿರುವ ಅಭ್ಯರ್ಥಿಗಳಿಗೆ ಸಿಎಂ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಮುಂಬರುವ ಎಲ್ಲಾ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡುವ ನಿರ್ಧಾರವನ್ನು ಅವರು ಪ್ರಕಟಿಸಿದ್ದು, ಇದರಿಂದ ಲಕ್ಷಾಂತರ ಗ್ರಾಮೀಣ ಮತ್ತು ನಗರ ಭಾಗದ ಯುವಕರಿಗೆ ಅನುಕೂಲವಾಗಲಿದೆ.

ಹಿಂದಿನ ಸರ್ಕಾರದ ಮೇಲೆ ವಾಗ್ದಾಳಿ:

ನೇಮಕಾತಿ ವಿಳಂಬಕ್ಕೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮಗಳೇ ಮೂಲ ಕಾರಣ ಎಂದು ಸಿಎಂ ಆರೋಪಿಸಿದ್ದಾರೆ. “ಹಿಂದಿನ ಸರ್ಕಾರದ ಭ್ರಷ್ಟಾಚಾರದಿಂದಾಗಿ ವ್ಯವಸ್ಥೆ ಹದಗೆಟ್ಟಿತ್ತು. ಅದನ್ನು ಸರಿಪಡಿಸಿ, ಅರ್ಹರಿಗೆ ಅನ್ಯಾಯವಾಗದಂತೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ,” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಧರಣಿ ಹಿಂಪಡೆಯಲು ಮನವಿ:

ಸರ್ಕಾರವು ನಿಮ್ಮ ಪರವಾಗಿದ್ದು, ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಎದೆಗುಂದಬಾರದು. ನ್ಯಾಯಯುತವಾಗಿ ನೇಮಕಾತಿ ನಡೆಸಲು ಅಗತ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಪ್ರತಿಭಟನಾಕಾರರು ತಮ್ಮ ಧರಣಿಯನ್ನು ಕೈಬಿಟ್ಟು ಪರೀಕ್ಷಾ ತಯಾರಿ ನಡೆಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.


Share this with Friends

Related Post