ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ತಾರಕಕ್ಕೇರಿದ್ದು,ಮಳೆ ಕೊರತೆ ನಡುವೆಯೂ ರಾಜ್ಯಕ್ಕೆ ಕಾವೇರಿ ಆಘಾತ ಎದುರಾಗಿದೆ.ತಮಿಳುನಾಡಿಗೆ ಕಾವೇರಿ ನೀರು ಹರಿಸಲೇಬೇಕಾದ ಸ್ಥಿತಿಗೆ ಸಿಲುಕಿದೆ.
ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳ ನೀರಿನ ಸಂಗ್ರಹ ಹಾಗೂ ಹವಾಮಾನ ಮುನ್ಸೂಚನೆಯನ್ನು ಪರಿಶೀಲಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC), ಆಗಸ್ಟ್ 12 ರಿಂದ ಜಾರಿಗೆ ಬರುವಂತೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಮಂಗಳವಾರ ಹೊಸದಾಗಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಬಹುತೇಕ 1tmc ನೀರು ಹರಿಸಬೇಕಾಗಲಿದೆ.
ದೆಹಲಿಯಲ್ಲಿ ನಡೆದ ಸಮಿತಿಯ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಹೊರಬಿದ್ದಿದ್ದು, ಇದು ಕಾವೇರಿ ಜಲಾನಯನ ಪ್ರದೇಶದ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿಂದೆ ಜುಲೈ ಅಂತ್ಯದಲ್ಲಿ ದಿನಕ್ಕೆ 3,500 ಕ್ಯೂಸೆಕ್ ನೀರು ಹರಿಸುವಂತೆ ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಎತ್ತಿಹಿಡಿದಿತ್ತಾದರೂ, ಕರ್ನಾಟಕವು ತನ್ನದೇ ಆದ ನೀರಿನ ಅಭಾವ ಎದುರಿಸುತ್ತಿರುವುದರಿಂದ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಮತ್ತೆ 12 ಸಾವಿರ ಕ್ಯೂಸಕ್ ನೀರು ಹರಿಸುವ ನಿರ್ದೇಶನ ನೀಡಿರುವುದು ಕನ್ನಡಿಗರ ಆಕ್ರೋಶ ಹೆಚ್ಚುವಂತೆ ಮಾಡಿದೆ.
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು; ಆಗಸ್ಟ್ 13 ಕ್ಕೆ ವಿಚಾರಣೆ:
ಕರ್ನಾಟಕ ಸರ್ಕಾರವು ತಮಗೆ ಬರಬೇಕಾದ ಕಾವೇರಿ ನ್ಯಾಯಸಮ್ಮತ ಪಾಲನ್ನು ಸಮರ್ಪಕವಾಗಿ ಬಿಡುತ್ತಿಲ್ಲ ಎಂದು ಆರೋಪಿಸಿ ಸಿ. ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರವು ಆಗಸ್ಟ್ 3 ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ತಮಿಳುನಾಡಿನ ರೈತರ ಹಿತದೃಷ್ಟಿಯಿಂದ ಅರ್ಜಿಯ ತುರ್ತು ವಿಚಾರಣೆ ನಡೆಸಬೇಕೆಂಬ ಮನವಿಗೆ ಸ್ಪಂದಿಸಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠವು, ಆಗಸ್ಟ್ 13 ರಂದು (ಗುರುವಾರ) ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಲು ಸಮ್ಮತಿಸಿದೆ.
ಆಗಸ್ಟ್ 13 ರಂದು ಕರ್ನಾಟಕ ಬಂದ್ ಕರೆ; ಗಡಿ ಬಂದ್ ಮಾಡಲು ತೀರ್ಮಾನ:
ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಲು ಬರುತ್ತಿರುವ ಆದೇಶಗಳನ್ನು ಖಂಡಿಸಿ ಕಾವೇರಿ ಜಲಾನಯನ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಒಕ್ಕೂಟಗಳು ಒಟ್ಟುಗೂಡಿ ಆಗಸ್ಟ್ 13 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ‘ಕರ್ನಾಟಕ ಬಂದ್’ ಆಚರಿಸಲು ಜಂಟಿ ಕರೆ ನೀಡಿವೆ. ಇದರ ಭಾಗವಾಗಿ ಕರ್ನಾಟಕ-ತಮಿಳುನಾಡು ಗಡಿಯನ್ನು ಸಂಪೂರ್ಣವಾಗಿ ಬಂದ್ ಮಾಡಲು ಹಾಗೂ ತಮಿಳುನಾಡು ನೋಂದಣಿಯ ಯಾವುದೇ ವಾಹನಗಳು ರಾಜ್ಯ ಪ್ರವೇಶಿಸದಂತೆ ತಡೆಯಲು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ.
ರಾಜ್ಯದ ಕುಡಿಯುವ ನೀರಿನ ಅಗತ್ಯಕ್ಕೆ ಮೊದಲ ಆದ್ಯತೆ ಸಿಗಬೇಕು ಎಂದು ಸಂಘಟನೆಗಳು ಪಟ್ಟು ಹಿಡಿದಿದ್ದು, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹಾಗೂ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

