Vikil S Hiremath
ಬೆಂಗಳೂರು, ಮೇ 20: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ಅನುಮೋದನೆ ನೀಡಬೇಕು ಎಂದು ರಾಜ್ಯಪಾಲರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಮನವಿ ಮಾಡಿದ್ದಾರೆ.

ಧಾರವಾಡ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಬುಧವಾರ ಭೇಟಿ ಮಾಡಿ ಸಚಿವರು ಮನವಿ ಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಲಾಡ್ ಅವರು, ಪ್ರತ್ಯೇಕ ಧಾರವಾಡ ಪಾಲಿಕೆ ಆಗಬೇಕು ಎಂದು ಹಲವು ವರ್ಷಗಳ ಬೇಡಿಕೆ ಇತ್ತು. ಹೋರಾಟವೂ ನಡೆದಿತ್ತು. ನಮ್ಮ ಸರ್ಕಾರ ಬಂದ ನಂತರ ಪ್ರತ್ಯೇಕ ಪಾಲಿಕೆ ಬೇಡಿಕೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ರಾಜ್ಯಪಾಲರ ಒಪ್ಪಿಗೆಗೆ ಕಳಿಸಲಾಗಿತ್ತು. ಒಂದು ವರ್ಷದಿಂದ ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಇದೀಗ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯವರು ಒತ್ತಡ ಹಾಕಲು ಆರಂಭಿಸಿದರು. ಸರ್ಕಾರದ ಪ್ರಸ್ತಾವನೆಯನ್ನು ಅಂಗೀಕರಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.

ಈ ವೇಳೆ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ, ಶ್ರೀ ಎನ್ ಎಚ್ ಕೋನರಡ್ಡಿ, ಹೋರಾಟ ಸಮಿತಿ ಮುಖಂಡರಾದ ಶ್ರೀ ಬಿ ಡಿ ಹಿರೇಮಠ್, ಹೂಡಾ ಮಾಜಿ ಅಧ್ಯಕ್ಷ ದಾನಪ್ಪ ಕಬ್ಬೇರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶ್ರೀ ನಾಗರಾಜ್ ಗೌರಿ, ಅನೇಕರು ಉಪಸ್ಥಿತರಿದ್ದರು.

