Thu. Jun 11th, 2026

ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಭರವಸೆ

Share this with Friends

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಎಲ್ಲಾ ವದಂತಿಗಳನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಈ ಜನಪ್ರಿಯ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತರಲಾದ ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ. ಸಾರ್ವಜನಿಕರು ಹಾಗೂ ಗೃಹಿಣಿಯರು ಇಂತಹ ಸುಳ್ಳು ಅಪಪ್ರಚಾರಗಳಿಗೆ ಕಿವಿಗೊಟ್ಟು ಆತಂಕಕ್ಕೊಳಗಾಗಬಾರದು ಎಂದು ಅವರು ಮನವಿ ಮಾಡಿದರು.

ತಾಂತ್ರಿಕ ಪರಿಶೀಲನೆಯಷ್ಟೇ ಹೊರತು ಯೋಜನೆ ಬಂದ್ ಅಲ್ಲ:

ಇತ್ತೀಚೆಗೆ ಮೃತಪಟ್ಟ ಮಹಿಳೆಯರ ಹೆಸರುಗಳನ್ನು ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗುತ್ತಿರುವುದು ಮತ್ತು ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸುತ್ತಿರುವುದರ ಹಿಂದೆ ಕೇವಲ ತಾಂತ್ರಿಕ ಕಾರಣಗಳಿವೆ. ಸರ್ಕಾರದ ಹಣ ದುರುಪಯೋಗವಾಗದಂತೆ ತಡೆಯಲು ಮತ್ತು ಕೇವಲ ಅರ್ಹ ಫಲಾನುಭವಿಗಳ ಖಾತೆಗೆ ಮಾತ್ರ ತಡೆರಹಿತವಾಗಿ ಹಣ ತಲುಪಿಸುವ ಸಲುವಾಗಿ ಇಲಾಖೆಯು ಈ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆಯೇ ಹೊರತು ಯೋಜನೆಯನ್ನು ನಿಲ್ಲಿಸಲು ಅಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ವಿಪಕ್ಷಗಳ ಅಪಪ್ರಚಾರಕ್ಕೆ ತಿರುಗೇಟು:

ವಿರೋಧ ಪಕ್ಷಗಳು ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಸೃಷ್ಟಿಸುತ್ತಿರುವ ಸುಳ್ಳು ವದಂತಿಗಳು ಸತ್ಯಕ್ಕೆ ದೂರವಾಗಿವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಅಗತ್ಯವಿರುವ ಪೂರ್ಣ ಅನುದಾನವನ್ನು ಮೀಸಲಿಡಲಾಗಿದೆ ಎಂದು ಗೂಳಿಗೌಡ ತಿಳಿಸಿದರು.

 

 

 


Share this with Friends

Related Post