Sat. Jun 13th, 2026

ಕುಮಾರಸ್ವಾಮಿ ಮಾರ್ಗದರ್ಶನದಲ್ಲೇ ಬಿಡದಿ ಟೌನ್‌ಶಿಪ್ ಅಭಿವೃದ್ಧಿ; ಕಾನೂನು ಹೋರಾಟಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯಭರಿತ ಶುಭ ಹಾರೈಕೆ

Share this with Friends

ಬೆಂಗಳೂರು:ಬಿಡದಿ ಸಮೀಪ ಕೃತಕ ಬುದ್ಧಿಮತ್ತೆ (AI) ಆಧಾರಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಗಾಗಿ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕಾನೂನು ಸಮರದ ಎಚ್ಚರಿಕೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಹಾಗೂ ವ್ಯಂಗ್ಯಭರಿತ ತಿರುಗೇಟು ನೀಡಿದ್ದಾರೆ. “ಕಾನೂನು ಹೋರಾಟ ಮಾಡಲು ಹೊರಟಿರುವ ಕುಮಾರಸ್ವಾಮಿ ಅವರಿಗೆ ನಾನು ಶುಭ ಕೋರುತ್ತೇನೆ” ಎಂದು ಹೇಳುವ ಮೂಲಕ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಡದಿ ಟೌನ್‌ಶಿಪ್ ಯೋಜನೆ ಹೊಸದೇನಲ್ಲ ಎಂದು ನೆನಪಿಸಿದರು. “ಸ್ವತಃ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನ ಹಾಗೂ ದೂರದೃಷ್ಟಿಯಡಿಯಲ್ಲೇ ಈ ಟೌನ್‌ಶಿಪ್ ಯೋಜನೆ ರೂಪಿತಗೊಳ್ಳುತ್ತಿದೆ. ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ತಂದಿದ್ದ ಪ್ರಸ್ತಾವನೆಯನ್ನೇ ಈಗ ಅಭಿವೃದ್ಧಿಯ ಹಿತದೃಷ್ಟಿಯಿಂದ ಮುಂದುವರಿಸಲಾಗುತ್ತಿದೆ” ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲದ ಉಲ್ಲೇಖ:

ಇದೇ ವೇಳೆ ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಭೇಟಿಯನ್ನು ಸ್ಮರಿಸಿದ ಮುಖ್ಯಮಂತ್ರಿಗಳು, “ನಿನ್ನೆ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ. ಆ ಸಂದರ್ಭದಲ್ಲಿ ಈ ಯೋಜನೆಯ ಕುರಿತು ಪ್ರಸ್ತಾಪಿಸಿದಾಗ, ಪ್ರಧಾನಿಯವರು ತಾವು ಈ ಹಿಂದೆ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಏಳೆಂಟು ಟೌನ್‌ಶಿಪ್‌ಗಳನ್ನು ಯಶಸ್ವಿಯಾಗಿ ನಿರ್ಮಿಸಿದ್ದನ್ನು ನೆನಪಿಸಿಕೊಂಡರು. ನೀವು ಅತ್ಯಂತ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ, ಬೆಂಗಳೂರಿನ ಜನಸಂಖ್ಯೆ ಮತ್ತು ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಇಂತಹ ಸ್ಯಾಟಲೈಟ್ ಟೌನ್‌ಶಿಪ್‌ಗಳು ಅತ್ಯಗತ್ಯ ಎಂದು ನನಗೆ ಪ್ರಶಂಸಿಸಿ ಕಿವಿಮಾತು ಹೇಳಿದ್ದಾರೆ” ಎಂದು ಬಹಿರಂಗಪಡಿಸಿದರು.

ಪ್ರಧಾನಮಂತ್ರಿಯವರ ಆ ಕಿವಿಮಾತು ಮತ್ತು ಮಾರ್ಗದರ್ಶನವನ್ನು ಸಂಪೂರ್ಣವಾಗಿ ಗಮನದಲ್ಲಿಟ್ಟುಕೊಂಡು ನಾವು ಜಾಗತಿಕ ಮಟ್ಟದ ಈ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ಬಿಡದಿ ಟೌನ್‌ಶಿಪ್ ವಿವಾದದಲ್ಲಿ ಪ್ರಧಾನಿ ಮೋದಿ ಅವರ ಹೆಸರನ್ನು ಪ್ರಸ್ತಾಪಿಸುವ ಮೂಲಕ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ವಿರೋಧಕ್ಕೆ ಕಾಂಗ್ರೆಸ್ ಪ್ರತಿ-ತಂತ್ರ ಹೂಡಿದೆ.

 

 

 


Share this with Friends

Related Post