ಬೆಳಗಾವಿ:ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಬಿಜೆಪಿಯವರು ಹೋರಾಟ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧವೇ ಹೊರತು ರಾಜ್ಯ ಸರ್ಕಾರದ ವಿರುದ್ಧ ಅಲ್ಲ,ರಾಜ್ಯ ಸರ್ಕಾರ ರೈತರ ಪರವಾಗಿಯೇ ದಿಡ್ಡ ಕ್ರಮ ಕೈಗೊಂಡಿದೆ, ಬಿಜೆಪಿ ಅವರಿಗೆ ಮಾತನಾಡಲು ಬೇರೆ ವಿಚಾರ ಇಲ್ಲ. ಹೀಗಾಗಿ ಕಬ್ಬು,ಮೆಕ್ಕೆಜೋಳದ ಸಮಸ್ಯೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ರೈತರ ಜೊತೆಗೂಡಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದೆ, “ಕಬ್ಬು, ಮೆಕ್ಕೆಜೋಳ ವಿಚಾರದಲ್ಲಿ ರೈತರ ಪರವಾಗಿ ನಾವು ತೆಗೆದುಕೊಂಡಿರುವ ದಿಟ್ಟ ತೀರ್ಮಾನವನ್ನು ಬಿಜೆಪಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಎಂದಾದರೂ ತೆಗೆದುಕೊಂಡಿದ್ದಾರಾ? ಮೆಕ್ಕೆಜೋಳ ಖರೀದಿಗೆ ತೀರ್ಮಾನ ಮಾಡಿದ್ದೇವೆ. ಕಬ್ಬಿನ ವಿಚಾರದಲ್ಲಿ ರೈತರ ಪರವಾಗಿ ನಿಂತಿದ್ದೇವೆ. ಸಕ್ಕರೆ ಕಾರ್ಖಾನೆಯವರು ನಮಗೆ ನಷ್ಟವಾಗುತ್ತದೆ, ಕಾರ್ಖಾನೆ ಬಂದ್ ಮಾಡಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ. ಈ ಬೆಳೆಗಳಿಗೆ ದರ ನಿಗದಿ ಮಾಡುವವರು ಕೇಂದ್ರ ಸರ್ಕಾರದವರು. ಕಳೆದ 10 ವರ್ಷಗಳಿಂದ ಕೇಂದ್ರ ಸಕ್ಕರೆ ಬೆಲೆ ಹೆಚ್ಚಳ ಮಾಡಿಲ್ಲ. ಆದರೂ ಕೇಂದ್ರ ಸರ್ಕಾರ ಯಾಕೆ ಸಹಾಯ ಮಾಡುತ್ತಿಲ್ಲ. ನಿಮಗೆ ನಷ್ಟವಾದರೂ ರೈತರು ಬದುಕಬೇಕು ಎಂದು ನಾವು ಕಾರ್ಖಾನೆ ಮಾಲೀಕರ ಒತ್ತಾಯ ಮಾಡುತ್ತಿದ್ದೇವೆ ಎಂದರು.
“ಆಡಳಿತ ಪಕ್ಷ, ವಿರೋಧ ಪಕ್ಷ ಸೇರಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ವಿಶ್ವಾಸವಿದೆ. ರೈತರ ಸಮಸ್ಯೆ ವಿಚಾರದಲ್ಲಿ ಕೇಂದ್ರ ಯಾಕೆ ಭಾಗಿಯಾಗುತ್ತಿಲ್ಲ. ಪ್ರೋತ್ಸಾಹ ನೀಡುತ್ತಿಲ್ಲ. ಬೆಂಬಲ ಬೆಲೆ ಹಣ ಯಾಕೆ ಬಿಡುಗಡೆ ಮಾಡುತ್ತಿಲ್ಲ? ಬೆಳೆಗಳನ್ನು ಕೇಂದ್ರ ಸರ್ಕಾರ ಯಾಕೆ ಖರೀದಿ ಮಾಡುತ್ತಿಲ್ಲ. ಸಕ್ಕರೆ ಬೆಲೆ ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಬೇಕು. ಈ ಎಲ್ಲಾ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು” ಎಂದು ತಿಳಿಸಿದರು.
“ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಏನೆಲ್ಲಾ ಕೆಲಸ ಆಗಬೇಕು, ಕೇಂದ್ರ ಸರ್ಕಾರದಿಂದ ಬರಬೇಕಾದ ಬಾಕಿ ಹಣ ಬಿಡುಗಡೆಗೆ ಒತ್ತಡ ಹಾಕಬೇಕು. ಈ ನಿಟ್ಟಿನಲ್ಲಿ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಹೇಳಿದರು.

