ಶಿವಮೊಗ್ಗ: ಅರಬ್ ರಾಷ್ಟ್ರಗಳಲ್ಲಿ ಉಂಟಾಗಿರುವ ಪ್ರಚಲಿತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ತಿಳಿಸಿದರು.
ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಭರವಸೆ ನೀಡಿದರು.
ಸುರಕ್ಷಿತ ವಾಪಸಾತಿ ಆದ್ಯತೆ:
“ಅರಬ್ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಹಾಗೂ ಸ್ಥಾನಿಕ ಆಯುಕ್ತರೊಂದಿಗೆ ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ವಿಶೇಷವಾಗಿ ಬಳ್ಳಾರಿ ಮೂಲದ 30 ಮಂದಿಯನ್ನು ಮರಳಿ ಕರೆತರಲು ಕ್ರಮ ವಹಿಸಲಾಗುವುದು. ಪ್ರಸ್ತುತ ದುಬೈ ವಿಮಾನ ನಿಲ್ದಾಣದ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಅದು ಪುನರಾರಂಭಗೊಂಡ ತಕ್ಷಣವೇ ಕನ್ನಡಿಗರನ್ನು ಕರೆತರಲು ಅಗತ್ಯ ವ್ಯವಸ್ಥೆ ಮಾಡಲಾಗುವುದು” ಎಂದು ಸಿಎಂ ವಿವರಿಸಿದರು.
ಇದೇ ವೇಳೆ ದುಬೈನಲ್ಲೇ ಇರುವ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೊಂದಿಗೆ ದೂರವಾಣಿ ಮೂಲಕ ಚರ್ಚಿಸಿರುವುದಾಗಿ ತಿಳಿಸಿದ ಅವರು, ಅಲ್ಲಿನ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿಯನ್ನು ಹಂಚಿಕೊಂಡರು.
ಅಂತರಾಷ್ಟ್ರೀಯ ಬೆಳವಣಿಗೆಗೆ ಖಂಡನೆ:
ಅಂತರಾಷ್ಟ್ರೀಯ ಮಟ್ಟದ ಸಂಘರ್ಷಗಳ ಕುರಿತು ಪ್ರತಿಕ್ರಿಯಿಸಿದ ಅವರು, ಅಮೆರಿಕಾದ ದ್ವಂದ್ವ ನಿಲುವುಗಳನ್ನು ಖಂಡಿಸಿದರು. ಶಾಂತಿಯ ಮಂತ್ರ ಜಪಿಸುತ್ತಲೇ ಯುದ್ಧಕ್ಕೆ ಪ್ರಚೋದನೆ ನೀಡುವ ನಿಲುವು ಸರಿಯಲ್ಲ ಎಂದರಲ್ಲದೆ, ಇರಾನ್ನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ವಿದ್ಯುತ್ ದರ ಏರಿಕೆ ಇಲ್ಲ:
ಇನ್ನು ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗಲಿದೆ ಎಂಬ ವದಂತಿಗಳಿಗೆ ತೆರೆ ಎಳೆದ ಮುಖ್ಯಮಂತ್ರಿಗಳು, “ಸದ್ಯಕ್ಕೆ ಸರ್ಕಾರದ ಮುಂದೆ ವಿದ್ಯುತ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

