ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯ ಮುನ್ಸೂಚನೆ ಇರುವುದರಿಂದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಈ ನಿರ್ದೇಶನ ನೀಡಿದರು.
ಸಭೆಯ ಪ್ರಮುಖಾಂಶಗಳು:
ಜಿಲ್ಲಾಧಿಕಾರಿಗಳೇ ಜವಾಬ್ದಾರಿ: “ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು” ಎಂದು ಸಿಎಂ ತಿಳಿಸಿದರು.
ಮಳೆ ಕೊರತೆಯ ಆತಂಕ: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಮುಂಗಾರು ಕೊರತೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ನಲ್ಲಿ ಮಳೆ ತೀರ ಕಡಿಮೆಯಾಗುವ ಮುನ್ಸೂಚನೆ ಇರುವುದರಿಂದ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಬಿಸಿಗಾಳಿ ಮುನ್ನೆಚ್ಚರಿಕೆ: ಏಪ್ರಿಲ್ನಿಂದ ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ತೀವ್ರ ಬಿಸಿಗಾಳಿ ಕಂಡುಬರಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಕಡ್ಡಾಯವಾಗಿದೆ.
ಅನುದಾನದ ಕೊರತೆಯಿಲ್ಲ: ಕುಡಿಯುವ ನೀರಿನ ಪೂರೈಕೆಗೆ ಹಣಕಾಸಿನ ಅಡಚಣೆ ಇಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ ಅಗತ್ಯ ಅನುದಾನ ನೀಡುವಂತೆ ಹಣಕಾಸು ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಕೃಷಿ ಚಟುವಟಿಕೆಗಳ ಸಿದ್ಧತೆ ಹಾಗೂ ಜಾನುವಾರುಗಳ ಮೇವಿನ ಲಭ್ಯತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಆದೇಶಿಸಿದರು.
2,410 ಪಂಚಾಯತ್ಗಳಲ್ಲಿ ನೀರಿನ ಆತಂಕ – ಹೈ ಅಲರ್ಟ್ ಘೋಷಿಸಿದ ಸಿಎಂ:
ರಾಜ್ಯದಲ್ಲಿ ಬೇಸಿಗೆಯ ತಾಪ ಏರುತ್ತಿರುವ ಬೆನ್ನಲ್ಲೇ ಕುಡಿಯುವ ನೀರಿನ ಅಭಾವ ತಲೆದೋರಿದ್ದು, ಸುಮಾರು 213 ತಾಲೂಕುಗಳು ಹಾಗೂ 2,410 ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ಸರ್ಕಾರ ಗುರುತಿಸಿದ್ದು ಸಿಎಂ ಸಿದ್ದರಾಮಯ್ಯ ಹೈ ಅಲರ್ಟ್ ಘೋಷಿಸಿದರು.
ಪ್ರಸ್ತುತ ಸ್ಥಿತಿಗತಿ ಹಾಗೂ ಅಂಕಿಅಂಶಗಳು:
ಸದ್ಯ ರಾಜ್ಯದ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಸಮಸ್ಯೆ ನಿವಾರಣೆಗಾಗಿ ಸರ್ಕಾರ ಈಗಾಗಲೇ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದ್ದು, ಮಾಹಿತಿ ಇಂತಿದೆ:
ಟ್ಯಾಂಕರ್ ಪೂರೈಕೆ: 137 ಗ್ರಾಮಗಳಿಗೆ 129 ಟ್ಯಾಂಕರ್ಗಳ ಮೂಲಕ ನೀರು ಒದಗಿಸಲಾಗುತ್ತಿದೆ.
ಖಾಸಗಿ ಬೋರ್ವೆಲ್ ಬಾಡಿಗೆ: 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು 515 ಗ್ರಾಮಗಳಿಗೆ ನೀರು ಒದಗಿಸಲಾಗುತ್ತಿದೆ.
ನಗರ ಪ್ರದೇಶ: 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಸಮಸ್ಯೆ ಕಾಣಿಸಿಕೊಂಡಿದ್ದು, 145 ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ನೀರು ಹರಿಸಲಾಗುತ್ತಿದೆ.
ಜಿಲ್ಲಾವಾರು ಮಾಹಿತಿ:
ವರದಿಯ ಪ್ರಕಾರ, ಕಲಬುರಗಿ (147 ಪಂಚಾಯತ್), ತುಮಕೂರು (141), ಹಾವೇರಿ (138), ಮಂಡ್ಯ (130), ಬೆಳಗಾವಿ (127), ಉತ್ತರ ಕನ್ನಡ (125), ಚಿಕ್ಕಮಗಳೂರು (115) ಹಾಗೂ ಬಾಗಲಕೋಟೆ (114) ಜಿಲ್ಲೆಗಳಲ್ಲಿ ನೀರಿನ ಅಭಾವ ಅತಿ ಹೆಚ್ಚಾಗಿ ಕಂಡುಬರಬಹುದು ಎಂದು ಅಂದಾಜಿಸಲಾಗಿದೆ.
ಜಲಾಶಯಗಳಲ್ಲಿನ ನೀರಿನ ಮಟ್ಟ:
ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದೆ. ಇದು ಒಟ್ಟು ಸಾಮರ್ಥ್ಯದ ಶೇ. 36 ರಷ್ಟಾಗಿದ್ದು, ಕಳೆದ ವರ್ಷಕ್ಕಿಂತ (330.35 ಟಿ.ಎಂ.ಸಿ) ಸ್ವಲ್ಪ ಕಡಿಮೆಯಾಗಿದೆ. ಆದರೆ, ಜುಲೈ ಮಧ್ಯದವರೆಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಜಲಾಶಯದ ನೀರನ್ನು ಕಾಯ್ದಿರಿಸಲು ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಧಿಕಾರಿಗಳಿಗೆ ಸಿಎಂ ನೀಡಿದ ಪ್ರಮುಖ ಆದೇಶಗಳು:
ಟ್ಯಾಂಕರ್ ನೀರನ್ನು ಕೊನೆಯ ಆಯ್ಕೆಯಾಗಿ ಇರಿಸಿಕೊಳ್ಳಿ; ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯಲು ಮೊದಲ ಆದ್ಯತೆ ನೀಡಿ.
ತುರ್ತು ಸಂದರ್ಭದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಅವಕಾಶ ನೀಡಲಾಗಿದೆ.
ಮಳೆಗಾಲ ವಿಳಂಬವಾಗುವ ಸಾಧ್ಯತೆ ಇರುವುದರಿಂದ ನೀರಿನ ಲಭ್ಯತೆಯನ್ನು ಜುಲೈ ಅಂತ್ಯದವರೆಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಸಿಎಂ ಸೂಚಿಸಿದರು.

