Tue. Mar 17th, 2026

ದೆಹಲಿಯಲ್ಲಿ ಡಿಸಿಎಂ ಮಹತ್ವದ ಸಭೆ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಕಾನೂನು ತೊಡಕು ನಿವಾರಣೆಗೆ ಕಸರತ್ತು

Share this with Friends

ನವದೆಹಲಿ: ಕರ್ನಾಟಕದ ಪಾಲಿನ ಪ್ರಮುಖ ಜಲಾನಯನ ಯೋಜನೆಗಳಾದ ಯುಕೆಪಿ (ಕೃಷ್ಣಾ ಮೇಲ್ದಂಡೆ), ಮಹದಾಯಿ, ಮೇಕೆದಾಟು ಹಾಗೂ ತುಂಗಭದ್ರಾ ಯೋಜನೆಗಳಿಗೆ ಎದುರಾಗಿರುವ ಕಾನೂನು ಅಡೆತಡೆಗಳನ್ನು ಶೀಘ್ರವಾಗಿ ನಿವಾರಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿಂದು ರಾಜ್ಯದ ಪರ ವಕೀಲರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.

ಇಲ್ಲಿನ ಕರ್ನಾಟಕ ಭವನದಲ್ಲಿ ನಡೆದ ಈ ಸುದೀರ್ಘ ಸಭೆಯಲ್ಲಿ, ಅಂತರ್ಜಲ ವಿವಾದಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಅರ್ಜಿಗಳ ಕುರಿತು ವಕೀಲರ ತಂಡದೊಂದಿಗೆ ಚರ್ಚಿಸಲಾಯಿತು. ವಿಶೇಷವಾಗಿ ಯುಕೆಪಿ 3ನೇ ಹಂತದ ಯೋಜನೆ ಜಾರಿಗೆ ಇರುವ ತಾಂತ್ರಿಕ ಸಮಸ್ಯೆಗಳು ಮತ್ತು ಮೇಕೆದಾಟು ಯೋಜನೆಗೆ ಕೇಂದ್ರದಿಂದ ಸಿಗಬೇಕಾದ ಪರಿಸರ ಅನುಮತಿ ಪಡೆಯಲು ಅನುಸರಿಸಬೇಕಾದ ಕಾನೂನು ಮಾರ್ಗಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಸಚಿವರ ಸಾಥ್:

ಈ ಸಂದರ್ಭದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌, ಕಾನೂನು ಸಚಿವ ಹೆಚ್.ಕೆ. ಪಾಟೀಲ್‌, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಉಪಸ್ಥಿತರಿದ್ದು, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು.

ಒಗ್ಗಟ್ಟಿನ ಹೋರಾಟ:

ಸಭೆಯ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ರಾಜ್ಯದ ಹಿತರಕ್ಷಣೆ ವಿಷಯದಲ್ಲಿ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಯೋಜನೆಗಳ ಅನುಷ್ಠಾನಕ್ಕೆ ಇರುವ ಅಡೆತಡೆಗಳನ್ನು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧತೆ ನಡೆಸಿದ್ದೇವೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ರಾಜ್ಯದ ಸಂಸದರೊಂದಿಗೂ ಚರ್ಚಿಸಲಾಗುವುದು,” ಎಂದು ತಿಳಿಸಿದರು.


Share this with Friends

Related Post