ಬೆಂಗಳೂರು: ರಾಜಧಾನಿಯ ಬಿಇಎಲ್ (BEL) ವೃತ್ತದಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ “ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್” ಸಂಸ್ಥೆಯ ಆವರಣದಲ್ಲಿದ್ದ ಹಿಂದಿ ನಾಮಫಲಕವನ್ನು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರ ಮಾರ್ಗದರ್ಶನ ಹಾಗೂ ಕರವೇ ಬೆಂಗಳೂರು ಜಿಲ್ಲಾಧ್ಯಕ್ಷರಾದ ಧರ್ಮಣ್ಣ ಅವರ ನೇತೃತ್ವದಲ್ಲಿ ಈ ಪ್ರತಿಭಟನಾತ್ಮಕ ಹೋರಾಟ ನಡೆದಿದೆ. ಕೇಂದ್ರ ಸರ್ಕಾರದ ಸಂಸ್ಥೆಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡದೆ ಹಿಂದಿ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ಹಾಗೂ ಮುಖಂಡರು ಏಕಾಏಕಿ ಬಿಇಎಲ್ ಸಂಸ್ಥೆಯ ಆವರಣಕ್ಕೆ ನುಗ್ಗಿದ್ದಾರೆ. ಅಲ್ಲಿ ಅಳವಡಿಸಲಾಗಿದ್ದ ಹಿಂದಿ ನಾಮಫಲಕಗಳನ್ನು ಕಿತ್ತೆಸೆದು ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಪದಾಧಿಕಾರಿಗಳು, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಕೇಂದ್ರ ಸರ್ಕಾರದ ಯಾವುದೇ ಸಂಸ್ಥೆಗಳಿದ್ದರೂ ಸ್ಥಳೀಯ ಭಾಷೆಯಾದ ಕನ್ನಡಕ್ಕೆ ಮೊದಲ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ನಾಮಫಲಕಗಳಲ್ಲಿ ಹಿಂದಿ ಭಾಷೆಯನ್ನು ಪ್ರಮುಖವಾಗಿ ಬಿಂಬಿಸುವುದನ್ನು ಕರವೇ ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೋರಾಟದಲ್ಲಿ ಕರವೇ ಮಹಿಳಾ ಘಟಕದ ಮುಖಂಡರಾದ ಶ್ವೇತಾ ಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ, ಕನ್ನಡ ಪರ ಘೋಷಣೆಗಳನ್ನು ಕೂಗಿದರು.

