Fri. Mar 6th, 2026

ಮೆಟ್ರೋ ದರ ಏರಿಕೆ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

Share this with Friends

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ. 15ರಿಂದ 20ರಷ್ಟು ಹೆಚ್ಚಳ ಮಾಡಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವೆ ವಾಕ್ಸಮರ ತಾರಕಕ್ಕೇರಿದೆ. “ದರ ಏರಿಕೆಯು ಕೇಂದ್ರದ ನಿರ್ಧಾರ” ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಸದರು ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, “ಮೆಟ್ರೋ ದರ ಏರಿಕೆಯ ಪ್ರಕ್ರಿಯೆ ಆರಂಭವಾಗಿದ್ದೇ ರಾಜ್ಯ ಸರ್ಕಾರದಿಂದ. ಬಿಎಂಆರ್‌ಸಿಎಲ್ (BMRCL) ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯದ ನಗರಾಭಿವೃದ್ಧಿ ಇಲಾಖೆ ಹಾಗೂ ಹಣಕಾಸು ಇಲಾಖೆ ಒಪ್ಪಿಗೆ ನೀಡಿವೆ. ಇದಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳು ನನ್ನ ಬಳಿ ಇವೆ. ವಾಸ್ತವ ಹೀಗಿರುವಾಗ ಮುಖ್ಯಮಂತ್ರಿಗಳು ಜನರ ದಿಕ್ಕು ತಪ್ಪಿಸಲು ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ,” ಎಂದು ಆರೋಪಿಸಿದರು.

ದೆಹಲಿ ಮೆಟ್ರೋಗೆ ಹೋಲಿಸಿದರೆ ಬೆಂಗಳೂರು ಮೆಟ್ರೋ ದರವು ಎರಡು ಪಟ್ಟು ಅಧಿಕವಾಗಿದೆ. ಇದು ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡಲಾಗುತ್ತಿದೆ.ರಾಜ್ಯದಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳಿಂದ ಉಂಟಾಗಿರುವ ಹಣಕಾಸಿನ ಮುಗ್ಗಟ್ಟನ್ನು ಸರಿದೂಗಿಸಲು ಮೆಟ್ರೋ ಪ್ರಯಾಣಿಕರ ಮೇಲೆ ದರ ಏರಿಕೆಯ ಬರೆ ಹಾಕಲಾಗುತ್ತಿದೆ ಎಂದು ಆರೋಪಿಸಿ ದರ ನಿಗದಿ ಸಮಿತಿಗೆ (FFC) ರಾಜ್ಯ ಸರ್ಕಾರವೇ ಪತ್ರ ಬರೆದು ದರ ಹೆಚ್ಚಳಕ್ಕೆ ಶಿಫಾರಸು ಮಾಡಿರುವುದನ್ನು ಸೂರ್ಯ ಬಹಿರಂಗಪಡಿಸಿದರು.

ಪ್ರತಿಭಟನೆಯ ಎಚ್ಚರಿಕೆ:

“ರಾಜ್ಯ ಸರ್ಕಾರವು ಈ ಕೂಡಲೇ ತನ್ನ ಹಠಮಾರಿ ಧೋರಣೆ ಬಿಟ್ಟು, ದರ ಏರಿಕೆಯನ್ನು ಹಿಂಪಡೆಯಬೇಕು. ಒಂದು ವೇಳೆ ಸರ್ಕಾರ ದರ ಕಡಿತಗೊಳಿಸದಿದ್ದರೆ ಮೆಟ್ರೋ ನಿಲ್ದಾಣಗಳ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು,” ಎಂದು ಅವರು ಎಚ್ಚರಿಸಿದರು.

“ಸುಳ್ಳು ಹೇಳುವುದನ್ನು ಬಿಟ್ಟು ಸಿದ್ದರಾಮಯ್ಯನವರು ಜನರ ಹಿತಾಸಕ್ತಿ ಕಾಪಾಡಲಿ. ಮೆಟ್ರೋ ದರ ಏರಿಕೆಯ ಸಂಪೂರ್ಣ ಹೊಣೆ ರಾಜ್ಯ ಸರ್ಕಾರದ್ದೇ ಆಗಿದೆ.”ಎಂದರು.

 


Share this with Friends

Related Post