ಮೈಸೂರು: ದೇಶದ ಗಮನ ಸೆಳೆದಿರುವ ಮೈಸೂರು ನಗರ ಸಾರಿಗೆಯ ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಂ ವ್ಯವಸ್ಥೆ ಯುಪಿಎಸ್ ಸಮಸ್ಯೆಯಿಂದ ಸ್ಥಗಿತಗೊಂಡಿದ್ದು ಆದಷ್ಟು ಬೇಗ ಈ ವ್ಯವಸ್ಥೆಯನ್ನು ಈ ಹಿಂದಿನಂತೆ ಮರುಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದೆಂದು ಮೈಸೂರು ನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು ನಗರ ಸಾರಿಗೆ ವಿಭಾಗದ ಕೆಎಸ್ಆರ್ಟಿಸಿ ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಂ ಹಾಳಾಗಿದ್ದು, ಇದರಿಂದ ಯಾವ ಬಸ್ ಎಲ್ಲಿ ಸಂಚರಿಸುತ್ತಿದೆ, ಎಷ್ಟು ವೇಗವಾಗಿ ಹೋಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಸಮಸ್ಯೆಯಾಗುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿದ್ದು, ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಿಎಂ ಕಚೇರಿ ಸೂಚನೆಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಂ ವ್ಯವಸ್ಥೆಯ ಕಾರ್ಯನಿರ್ವಹಣೆಗಾಗಿ ನಿರಂತರ ವಿದ್ಯುತ್ ಸಂಪರ್ಕ ಒದಗಿಸಲು ಯುಪಿಎಸ್ಗಳನ್ನು ಅಳವಡಿಸಲಾಗಿರುತ್ತದೆ. ಆದರೆ ಅದು ಕಾರ್ಯ ನಿರ್ವಹಿಸದಿರುವ ಕಾರಣ ಹೊಸ ಯುಪಿಎಸ್ಗಳ ಸರಬರಾಜಿಗೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಕೋರಲಾಗಿದೆ. ಯುಪಿಎಸ್ಗಳ ಖರೀದಿಗಾಗಿ ಕೇಂದ್ರ ಕಚೇರಿಯಿಂದ ಟೆಂಡರ್ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಯುಪಿಎಸ್ ಸರಬರಾಜಾದ ತಕ್ಷಣವೇ ಇಂಟಲಿಜೆಂಟ್ ಟ್ರಾನ್ಸ್ಪೋರ್ಟ್ ಸಿಸ್ಟಂ ವ್ಯವಸ್ಥೆಯನ್ನು ಹಿಂದಿನಂತೆ ಮರುಸ್ಥಾಪಿಸಲು ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

