Wed. Mar 18th, 2026

ವನ್ಯಜೀವಿಗಳ ಹಿತರಕ್ಷಣೆಗೆ ಆದ್ಯತೆ: ಬೇಸಿಗೆ ನಿರ್ವಹಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

Share this with Friends

ಬೆಂಗಳೂರು: ರಾಜ್ಯದಾದ್ಯಂತ ಬೇಸಿಗೆಯ ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕಾಡಿನೊಳಗಿನ ನೈಸರ್ಗಿಕ ಹಳ್ಳ-ಕೊಳ್ಳಗಳು ಹಾಗೂ ಜಲಗುಂಡಿಗಳು ಬತ್ತದಂತೆ ನಿಗಾ ವಹಿಸಲು ಸೂಚಿಸಿದ್ದಾರೆ. ಸೌರಶಕ್ತಿ ಚಾಲಿತ ಪಂಪ್‌ಸೆಟ್‌ಗಳ ಮೂಲಕ ಜಲಮೂಲಗಳಿಗೆ ನೀರು ತುಂಬಿಸುವ ಕೆಲಸ ನಿರಂತರವಾಗಿ ನಡೆಯಬೇಕು. ಈ ಕುರಿತಾದ ನೈಜ ಸ್ಥಿತಿಗತಿ ಹಾಗೂ ಮಾಹಿತಿಯನ್ನು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಗಮನಕ್ಕೆ ತರುವ ಮೂಲಕ ಪಾರದರ್ಶಕತೆ ಕಾಪಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

ಸಂರಕ್ಷಣೆಯಲ್ಲಿ ಜನರ ಸಹಭಾಗಿತ್ವ:

ವನ್ಯಜೀವಿ ಸಂರಕ್ಷಣೆ ಎಂಬುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಇದರಲ್ಲಿ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ. ಅರಣ್ಯದಂಚಿನ ಗ್ರಾಮಸ್ಥರು ಹಾಗೂ ಸ್ಥಳೀಯ ಸಮುದಾಯದೊಂದಿಗೆ ಇಲಾಖೆಯು ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು. ಅವರ ವಿಶ್ವಾಸ ಗಳಿಸಿದಾಗ ಮಾತ್ರ ಸಂರಕ್ಷಣಾ ಕಾರ್ಯಗಳು ಹೆಚ್ಚು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ:

ಬಿಸಿಲಿನ ತೀವ್ರತೆಯಿಂದ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಗಳಿರುತ್ತವೆ. ಇದನ್ನು ತಡೆಗಟ್ಟಲು ಅಗತ್ಯ ಸಿಬ್ಬಂದಿ ಹಾಗೂ ತಾಂತ್ರಿಕ ಉಪಕರಣಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳುವಂತೆ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪ್ರಾಣಿಗಳಿಗೆ ಕಾಡಿನಲ್ಲೇ ಸಮರ್ಪಕವಾಗಿ ನೀರು ಮತ್ತು ಆಹಾರ ಸಿಗುವಂತಾದರೆ, ಅವು ನಾಡಿಗೆ ಬರುವುದನ್ನು ತಡೆಗಟ್ಟಬಹುದು ಎಂಬುದು ಈ ಯೋಜನೆಯ ಪ್ರಮುಖ ಆಶಯವಾಗಿದೆ ಎಂದು ತಿಳಿಸಿದ್ದಾರೆ.


Share this with Friends

Related Post