ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದರು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಜೀವಮಾನ ಸಾಧನೆ ಪ್ರಶಸ್ತಿ’ಗಳನ್ನು ಕೆಎಸ್ಟಿಎ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಜ್ಞಾನಿಗಳಾದ ಡಾ. ರಾಮಕೃಷ್ಣ ಮತ್ತು ಶ್ರೀಮತಿ ಹರಿಪ್ರಸಾದ್ ಅವರಿಗೆ ಪ್ರದಾನ ಮಾಡಿ ಮಾತನಾಡಿದ ಸಚಿವರು,ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸರ್ಕಾರ ಕೆಲಸ ಮಾಡಲಿದೆ, ಕೆಎಸ್ಟಿಎ ಅಕಾಡೆಮಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಗತ್ಯ ಸಹಕಾರ ನೀಡುವ ಮೂಲಕ, ಇದನ್ನು ಇಡೀ ದೇಶಕ್ಕೆ ಮಾದರಿ ಸಂಸ್ಥೆಯನ್ನಾಗಿ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಹಾಗೂ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ಚಿಂತನೆಯನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಗಳು ಕೇವಲ ಪ್ರಯೋಗಾಲಯಗಳಿಗೆ ಸೀಮಿತವಾಗದೆ, ಅವುಗಳ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ವಿಜ್ಞಾನ ಮತ್ತು ಸಮಾಜದ ನಡುವಿನ ಅಂತರವನ್ನು ಕಡಿಮೆ ಮಾಡಲು ಇಂತಹ ಕಾರ್ಯಕ್ರಮಗಳು ಸ್ಫೂರ್ತಿದಾಯಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಪ್ರಶಸ್ತಿ ಪುರಸ್ಕೃತರು:
1. ಪ್ರೊ. ಸಿ.ಎನ್.ಆರ್ ರಾವ್ – ಕೆಎಸ್ಟಿಎ ಜೀವಮಾನ ಸಾಧನೆ ಪ್ರಶಸ್ತಿ:
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಭಾರತೀಯ ಪ್ರಾಣಿಶಾಸ್ತ್ರ ಸರ್ವೇಕ್ಷಣಾ ಇಲಾಖೆಯ (ZSI) ಮಾಜಿ ನಿರ್ದೇಶಕರು ಹಾಗೂ ಖ್ಯಾತ ವಿಜ್ಞಾನಿಗಳಾದ ಡಾ. ರಾಮಕೃಷ್ಣ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
2. ಕನ್ನಡದಲ್ಲಿ ವಿಜ್ಞಾನ ಸಂವಹನಕ್ಕಾಗಿ ಜೀವಮಾನ ಸಾಧನೆ ಪ್ರಶಸ್ತಿ (2023):
ಕನ್ನಡ ಭಾಷೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು (STEAM) ಜನಪ್ರಿಯಗೊಳಿಸುವಲ್ಲಿ ಮಹತ್ತರ ಸೇವೆ ಸಲ್ಲಿಸಿದ ಸಿಎಫ್ಟಿಆರ್ಐ (CFTRI) ಸಂಸ್ಥೆಯ ಮಾಜಿ ವಿಜ್ಞಾನಿ ಶ್ರೀಮತಿ ಹರಿಪ್ರಸಾದ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ವಿಜ್ಞಾನ ಮತ್ತು ತಂತ್ರಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಶೈಕ್ಷಣಿಕ ಸಂಸ್ಥೆಗಳು ಹಾಗೂ ಉದ್ಯಮ ವಲಯದ ಶಿಕ್ಷಣ ತಜ್ಞರು, ಸಂಶೋಧಕರು, ಇಂಜಿನಿಯರ್ಗಳು ಮತ್ತು ತಂತ್ರಜ್ಞರು ನೀಡಿದ ಕೊಡುಗೆಗಳನ್ನು ಗುರುತಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು (KSTA) ‘ಫೆಲೋ ಆಫ್ ಕೆಎಸ್ಟಿಎ’ (Fellow of KSTA) ಗೌರವವನ್ನು ನೀಡುತ್ತದೆ. 2021ರಿಂದ ಈ ಗೌರವವನ್ನು ನೀಡಲಾಗುತ್ತಿದ್ದು, 2023ನೇ ಸಾಲಿಗೆ ಒಟ್ಟು 33 ಸಾಧಕರನ್ನು ಈ ಗೌರವಕ್ಕಾಗಿ ಆಯ್ಕೆ ಮಾಡಲಾಗಿದ್ದು, ಸಾಧಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು (ಐಎಎಸ್), ಕೆಎಸ್ಟಿಎ ಚೇರ್ಮನ್ ಪ್ರೊ. ರಾಜಾಸಾಬ್ ಎ.ಹೆಚ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್ ಉಪಸ್ಥಿತರಿದ್ದರು.

