Sat. Jun 6th, 2026

ಬಡವರಿಗೆ ಉಚಿತ ಚಿಕಿತ್ಸೆ ನೀಡಿ, ವೈದ್ಯಕೀಯ ವೃತ್ತಿ ಸಾರ್ಥಕಪಡಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ ಕರೆ

Share this with Friends

ಮೈಸೂರು: “ನಮ್ಮ ಸರ್ಕಾರ ಶಿಕ್ಷಣ, ಆರೋಗ್ಯ ಮತ್ತು ಕಾನೂನು ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಆರೋಗ್ಯ ಸೌಲಭ್ಯ ಸಿಗುವುದು ಮುಖ್ಯ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮೈಸೂರಿನ ವಿಶ್ವೇಶ್ವರನಗರದಲ್ಲಿ ನೂತನವಾಗಿ ನಿರ್ಮಿಸಲಾದ ‘ಜೆ ಸಿ ಸ್ಪೋರ್ಟ್ಸ್ ಮೆಡಿಸನ್ ಸೆಂಟರ್ ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರ ಬಗ್ಗೆ ಕಾಳಜಿ ಇರಲಿ:

ಆಸ್ಪತ್ರೆಯ ಸ್ಥಾಪಕರಾದ ಡಾ. ಗಿರೀಶ್ ಚಂದ್ರ ಅವರ ಸೇವೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, “ವೈದ್ಯಕೀಯ ವೃತ್ತಿ ಕೇವಲ ಹಣ ಗಳಿಕೆಗಾಗಿ ಆಗಿರಬಾರದು. ಸಮಾಜದ ಬಡವರಿಗೆ ಸಾಧ್ಯವಾದಷ್ಟು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ವೃತ್ತಿಯನ್ನು ಸಾರ್ಥಕಪಡಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಮೈಸೂರು ಅಭಿವೃದ್ಧಿಗೆ ಬದ್ಧ:

ತಮ್ಮ ತವರು ಜಿಲ್ಲೆಯಾದ ಮೈಸೂರಿನ ಮೇಲಿರುವ ಪ್ರೀತಿಯನ್ನು ವ್ಯಕ್ತಪಡಿಸಿದ ಅವರು, “ಈ ಮಣ್ಣಿನ ಜನರ ಋಣ ನನ್ನ ಮೇಲಿದೆ. ಅದಕ್ಕಾಗಿಯೇ ಮೈಸೂರಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ. ಜನರ ಜೀವನಮಟ್ಟ ಸುಧಾರಿಸುವುದೇ ನನ್ನ ಗುರಿ” ಎಂದರು.

ಸಮಸಮಾಜದ ಕನಸು:

ಡಾ. ಬಿ.ಆರ್. ಅಂಬೇಡ್ಕರ್, ಬುದ್ಧ, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳನ್ನು ಸ್ಮರಿಸಿದ ಸಿಎಂ, “ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ಬಂದಾಗ ಮಾತ್ರ ನಿಜವಾದ ಸ್ವಾತಂತ್ರ್ಯಕ್ಕೆ ಅರ್ಥ ಸಿಗುತ್ತದೆ. ನಮ್ಮ ಸರ್ಕಾರ ‘ನುಡಿದಂತೆ ನಡೆಯುವ’ ಮೂಲಕ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ. ಹಸಿವು ಮತ್ತು ಅಸಮಾನತೆ ಮುಕ್ತ ಸಮಾಜ ನಿರ್ಮಾಣವಾಗಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಕ್ಷೇತ್ರದ ಗಣ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

 


Share this with Friends

Related Post