Fri. Mar 6th, 2026

ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪನೆ: ಬಸವರಾಜ ರಾಯರೆಡ್ಡಿ

Share this with Friends

ಬೆಳಗಾವಿ:ಉತ್ತರ ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಮತ್ತು ಕೈಗಾರಿಕೆಗಳ ಬೇಡಿಕೆಯನುಸಾರವಾಗಿ ಉತ್ತಮ ತರಬೇತಿ ಹೊಂದಿರುವ ಮಾನವ ಸಂಪನ್ಮೂಲ ಒದಗಿಸಲು ಆದ್ಯತೆ ದೊರಕಿಸುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯುವ ವೇಳೆ ಮಾತನಾಡಿದ ಅವರು, ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾಲಯ ಸ್ಥಾಪಿಸುವ ಉದ್ದೇಶ ಹೊಂದಿದ್ದು, ಬರುವ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಇದನ್ನು ಘೋಷಿಸುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದಲ್ಲಿ ಒಟ್ಟು 14 ಜಿಲ್ಲೆಗಳಿದ್ದು, ಈ ಪೈಕಿ ತಲಾ 07 ಜಿಲ್ಲೆಗಳು ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ವ್ಯಾಪ್ತಿಯಲ್ಲಿವೆ.  ದಾವಣಗೆರೆಯಿಂದ ಚಾಮರಾಜನಗರದವರೆಗೆ ಮೈಸೂರು ಮಹಾರಾಜರು ಆಡಳಿತ ಕೊಟ್ಟಿದ್ದು, ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಅವರು ಕೊಟ್ಟ ಆದ್ಯತೆಯಿಂದಾಗಿ ಈ ಭಾಗಗಳು ಶಿಕ್ಷಣ, ಆರೋಗ್ಯ ಮತ್ತು ನೀರಾವರಿ ಕ್ಷೇತ್ರದಲ್ಲಿ ಮುಂದಿವೆ. ಆದರೆ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಪ್ರದೇಶಗಳು ಮದ್ರಾಸ್ ಪ್ರೆಸಿಡೆನ್ಸಿ ಹಾಗೂ ನಿಜಾಮ್ ಆಡಳಿತವಿತ್ತು. ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿ ನಿಜಾಮರು ಸುಮಾರು 250 ವರ್ಷ ಆಡಳಿತ ನಡೆಸಿದರು, ಇವರು ಶಿಕ್ಷಣ ಮತ್ತು ನೀರಾವರಿಗೆ ಯಾವುದೇ ಆದ್ಯತೆ ಕೊಡಲಿಲ್ಲ. ಈ ಭಾಗದಲ್ಲಿ ಶಾಲೆ, ಕಾಲೇಜುಗಳನ್ನು ಸ್ಥಾಪಿಸದ ಕಾರಣದಿಂದಾಗಿ ಈ ವ್ಯಾಪ್ತಿಯ ಜಿಲ್ಲೆಗಳು ಶಿಕ್ಷಣದಲ್ಲಿ ತೀವ್ರ ಹಿಂದುಳಿಯಲು ಕಾರಣವಾಯಿತು.  ರಾಜಸ್ಥಾನ ಬಿಟ್ಟರೆ, ಉತ್ತರ ಕರ್ನಾಟಕದ 14 ಜಿಲ್ಲೆಗಳು ಅತ್ಯಂತ ಒಣ ಪ್ರದೇಶ ಹೊಂದಿವೆ.  ಇಲ್ಲಿ ಮಳೆ ಹೆಚ್ಚು ಆಗಲ್ಲ, ಹಾಗೂ ಅಂತರ್ಜಲವೂ ಕಡಿಮೆ ಇದೆ. ಸಾಕ್ಷರತೆಯಲ್ಲಿ ರಾಜ್ಯದ ಸರಾಸರಿ 75.36 ಇದ್ದರೆ, ಉತ್ತರ ಕರ್ನಾಟಕ ಜಿಲ್ಲೆಗಳ ಪ್ರಮಾಣ 65 ಕ್ಕಿಂತ ಕಡಿಮೆ ಇದೆ.  ಹೀಗಾಗಿ ಉತ್ತರ ಕರ್ನಾಟಕದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್‍ನಿಂದ ಆರ್ಥಿಕ ನೆರವು ಪಡೆದು 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದ್ದು, ಈ ಭಾಗದ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಕಾರ್ಯವಾಗಿದೆ.  ಇದರ ಜೊತೆಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 400 ಹೊಸ ಕೆ.ಪಿ.ಎಸ್. ಶಾಲೆಗಳನ್ನು ಪ್ರಾರಂಭಿಸಲಾಗಿದೆ.  ಮಕ್ಕಳಿಗೆ ಇಂಗ್ಲೀಷ್ ಭಾಷೆಯ ಜ್ಞಾನ ದೊರಕುವಂತಾಗಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 35 ಎಲ್‍ಕೆಜಿ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ.  ಹೀಗೆ ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ, ಈ ಭಾಗದಲ್ಲಿಯೂ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವ ಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಐಐಟಿಯಲ್ಲಿ ರಾಜ್ಯದವರಿಗೆ ಶೇ. 50 ಮೀಸಲು ಕಲ್ಪಿಸಲು ಸಹಕಾರ ನೀಡುವಂತೆ ಬಸವರಾಜ ರಾಯರಡ್ಡಿ ಅವರು ಪ್ರತಿಪಕ್ಷದವರಿಗೆ ಮನವಿ ಮಾಡಿದರು.  ಧಾರವಾಡದಲ್ಲಿ ಐಐಟಿ ಅನ್ನು ಪ್ರಾರಂಭಿಸಲು ನಮ್ಮ ರಾಜ್ಯದಿಂದ ಕೇಂದ್ರಕ್ಕೆ 2 ಸಾವಿರ ಕೋಟಿ ರೂಪಾಯಿಗಳೂ ಹೆಚ್ಚಿನ ಮೌಲ್ಯದ ಭೂಮಿಯನ್ನು ಉಚಿತವಾಗಿ ಕೊಟ್ಟಿದ್ದೇವೆ.  ಬೇರೆ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಾಗಿ ಇಲ್ಲಿ ಪ್ರವೇಶ ಪಡೆಯುತ್ತಾರೆ.  ಹೀಗಾಗಿ ಐಐಟಿ ಯಿಂದ ಕರ್ನಾಟಕಕ್ಕೆ ಯಾವುದೇ ಉಪಯೋಗ ಆಗುತ್ತಿಲ್ಲ.  ರಾಜ್ಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಗುತ್ತಿಲ್ಲ.  ಐಐಟಿ ಯಲ್ಲಿ ಶೇ. 50 ರಷ್ಟು ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲು ನೀಡುವಂತೆ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಮನವಿಗೆ ಒಪ್ಪಿಗೆ ದೊರೆಯಲಿಲ್ಲ.  ಹೀಗಾಗಿ ಮುಖ್ಯಮಂತ್ರಿಗಳಿಂದ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲು ಸಿದ್ಧರಿದ್ದು, ಪ್ರತಿಪಕ್ಷದವರು ಕೇಂದ್ರ ಸರ್ಕಾರದ ಮನವೊಲಿಸಿ, ಒಪ್ಪಿಗೆ ದೊರಕಿಸಿದಲ್ಲಿ, ಕರ್ನಾಟಕದ ಹೆಚ್ಚಿನ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.

ಕಲ್ಯಾಣ ಕರ್ನಾಟಕದ ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ 970 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.  ನೂತನವಾಗಿ ರಚಿಸಲಾಗಿರುವ ತಾಲ್ಲೂಕುಗಳಿಗೆ 100 ಹಾಸಿಗೆ ಆಸ್ಪತ್ರೆಯನ್ನು ಮಂಜೂರು ಮಾಡಲಾಗಿದೆ.  ಅಲ್ಲದೆ ಬಾಣಂತಿಯರಿಗೆ ಉತ್ತಮ ಪೌಷ್ಠಿಕ ಆಹಾರ ನೀಡುವ ವಿಶೇಷ ಯೋಜನೆಯನ್ನು ಜಾರಿಗೊಳಿಸಿದ್ದು, ಇದರಿಂದ ಉತ್ತರ ಕರ್ನಾಟಕದಲ್ಲಿ ಶಿಶು ಮರಣ ಹಾಗೂ ತಾಯಿ ಮರಣ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಈ ಕ್ರಮ ಶ್ಲಾಘನೀಯವಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.


Share this with Friends

Related Post