ಬೆಂಗಳೂರು: ರಾಜ್ಯದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಬದ್ದವಾಗಿದ್ದು, ಅದಕ್ಕೆ ಪೂರಕವಾಗಿ ನವೆಂಬರ್ 25 ರಂದು ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಸಂವಾದ ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಕಾಶ ಅನ್ವೇಷಣೆಯತ್ತ ಪ್ರೇರೇಪಿಸುತ್ತದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ಇಂದು ಜೆಎನ್ಪಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜೆಎನ್ಪಿ ಸಹಯೋಗದಲ್ಲಿ ಜವಾಹರಲಾಲ್ ನೆಹರು ಪ್ಲಾನೆಟೇರಿಯಂನ ಯು.ಆರ್.ರಾವ್ ಭವನದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ನವೆಂಬರ್ 25 ರಂದು ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಹೈಸ್ಕೂಲ್ ಶಾಲಾ ವಿದ್ಯಾರ್ಥಿಗಳಿಗೆ ನೇರವಾಗಿ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಇದು ಅವಕಾಶ ಕಲ್ಪಿಸಲಿದೆ ಎಂದರು.
ರಾಜ್ಯದ ಇನ್ನಿತರೆ ಭಾಗಗಳ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ವ್ಯವಸ್ಥೆ ಮಾಡುವಂತೆ ಸಚಿವರು ಸೂಚನೆ ನೀಡಿದರು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ, ಸಂಶೋಧನೆ ಹಾಗೂ ಬಾಹ್ಯಾಕಾಶ ಅನ್ವೇಷಣೆಯತ್ತ ಪ್ರೇರೇಪಿಸುತ್ತವೆ. ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ ಎಂದರು.
“ರಾಜ್ಯದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಬದ್ದವಾಗಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅಂತರಿಕ್ಷ ಯಾತ್ರಿಕರೊಂದಿಗೆ ಸಂವಾದಿಸಲು ಅಪರೂಪದ ಅವಕಾಶ ಒದಗಿಸುತ್ತದೆ. ಇದು ಅವರಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುವ ಉತ್ಸಾಹವನ್ನು ಇನ್ನಷ್ಟು ಪೋಷಿಸಲಿದೆ”. ಎಂದರು.

