ಬೆಂಗಳೂರು:ಕರ್ನಾಟಕ ಹೈಕೋರ್ಟ್ ನ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸಲು ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿವೇಶಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರೂ ಆದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ. ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಪ್ರಕರಣಗಳು ಹಲವಾರು ವರ್ಷಗಳಿಂದ ಬಾಕಿ ಉಳಿದಿರುತ್ತವೆ. ಇದರಿಂದಾಗಿ ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿರುತ್ತಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಭ್ಯರ್ಥಿಗಳ ಹಾಗೂ ಅಧಿಕಾರಿ ನೌಕರರ ಭವಿಷ್ಯದ ಹಿತದೃಷ್ಟಿಯಿಂದ ಕರ್ನಾಟಕ ಉಚ್ಚನ್ಯಾಯಲಯ ಹಾಗೂ ವಿವಿಧ ವಿಭಾಗೀಯ ಪೀಠಗಳಲ್ಲಿ ಇತ್ಯರ್ಥವಾಗದೇ ಉಳಿದಿರುವ ಪ್ರಕರಣಗಳಲ್ಲಿ ಸ್ಪಷ್ಟವಾದ ಅಗತ್ಯ ಮಾಹಿತಿಯನ್ನು ಕಾಲಮಿತಿಯೊಳಗೆ ಸಲ್ಲಿಸಲು ಹಾಗೂ ಸರ್ಕಾರಿ ವಕೀಲರೊಂದಿಗೆ ಸಮನ್ವಯ ಸಾಧಿಸಿ ಎಲ್ಲಾ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲು ಸಂಬಂಧಪಟ್ಟ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲು ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.

